ಶಿಕ್ಷಕರ ವೇತನ ವಿಳಂಬ ಹಾಗೂ ಸಿಆರ್ಪಿ ಮತ್ತು ಬಿಆರ್ಪಿಗಳಿಗೆ ಪ್ರತಿ ತಿಂಗಳೂ ಮಾಡಬೇಕಾದ ವೇತನವನ್ನು ವಿನಾಕರಾಣ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಬುಧವಾರ ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು ಮಾತನಾಡಿ, ಕಳೆದ ಕೆಲ ವರ್ಷಗಳಿಂದ ಶಿಕ್ಷಕರಿಗೆ ಸಿಗಬೇಕಾದ ವೇತನ ಬಡ್ತಿ, ವಿಶೇಷ ಹೆಚ್ಚುವರಿ ಸ್ವಯಂಚಾಲಿತ ಬಡ್ತಿಗಳನ್ನು ಸಮಯಕ್ಕೆ ಸರಿಯಾಗಿ ಮಾಡುತ್ತಿಲ್ಲ. ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ತೀರ್ಪುಗಾರರಿಗೆ ಈವರೆಗೂ ಯಾವುದೇ ಹಣವನ್ನು ಇಲಾಖೆಯಿಂದ ಪಾವತಿಸಿಲ್ಲ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿಯನ್ನು ವಿಚಾರಿಸಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳೂ ಸಹ ಗಮನಹರಿಸುತ್ತಿಲ್ಲ. ಈ ಬಗ್ಗೆ ಸಾಕಷ್ಟು ಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸದ ಹಿನ್ನಲೆಯಲ್ಲಿ ಇಂದು ಕಚೇರಿಗೆ ಬಾಗಿಲು ಹಾಕಿ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸುತ್ತಿದ್ದೇವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು ಮನವಿ ಸ್ವೀಕರಿಸಿ ಮಾತನಾಡಿ, ಹಂತ ಹಂತವಾಗಿ ಶಿಕ್ಷಕರ ಸಮಸ್ಯೆ ಪರಿಹರಿಸಲು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ವಿಜಯ್ಕುಮಾರ್, ನಾರಾಯಣಸ್ವಾಮಿ, ಶಿವಕುಮಾರ್, ಗಜೇಂದ್ರ, ನಾಗರಾಜ್, ಸುರೇಶ್, ದಾಕ್ಷಾಯಣಿ ಹಾಜರಿದ್ದರು.