ಪ್ರತಿಯೊಬ್ಬರೂ ಕನಿಷ್ಟ ಕೆಲವೊಂದು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಿದರೂ ಸಾಕು. ಅದು ಮುಂದಿನ ಜನಾಂಗಕ್ಕೆ ನಾವು ನೀಡುವ ಬೆಲೆ ಕಟ್ಟಲಾಗದ ಕೊಡುಗೆಯಾಗಲಿದೆ ಎಂದು ಹಂಡಿಗನಾಳ ಗ್ರಾಮ ಪಂಚಾಯಿತಿ ಸದಸ್ಯ ಜಯರಾಂ ಹೇಳಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿಲೇಮಾಕಲಹಳ್ಳಿ ಗ್ರಾಮದಲ್ಲಿ ಭಾನುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಕಸಾಪದ ೧೦೧ ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ೧೦೧ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈಗ ನಾವು ಎದುರಿಸುತ್ತಿರುವ ನಾನಾ ಸಮಸ್ಯೆಗಳಿಗೆ ಪರಿಸರ ನಾಶವೇ ಮುಖ್ಯ ಕಾರಣವಾಗಿದೆ. ಪರಿಸರವನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರಿಂದಲೂ, ಎಲ್ಲಾ ಸಮಯದಲ್ಲೂ ಆಗಬೇಕಿದೆ. ಕೇವಲ ಮನೆ ಮನೆ ಕವಿಗೋಷ್ಠಿ, ವರ್ಷಕ್ಕೊಮ್ಮೆ ತಾಲ್ಲೂಕು ಸಾಹಿತ್ಯ ಸಮ್ಮೇಳನ ಹಾಗೂ ಮುಖ್ಯವಾಗಿ ನಗರ ಪ್ರದೇಶಕ್ಕಷ್ಟೇ ಸೀಮಿತವಾಗಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಇದೀಗ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮೀಣ ಪ್ರದೇಶದಲ್ಲಿ ೧೦೧ ಸಸಿ ನೆಡುವ ಕಾರ್ಯಕ್ಕೆ ಮುಂದಾಗಿರುವುದು ಸಂತಸದ ವಿಷಯ ಎಂದರು.

ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಮಾತನಾಡಿ, ಗಿಡಮರಗಳನ್ನು ಬೆಳೆಸುವುದರಿಂದ ಉತ್ತಮ ಮಳೆಯಾಗುವುದಷ್ಟೇ ಅಲ್ಲದೇ ಜನರ ಆರೋಗ್ಯವೂ ಸುಧಾರಿಸುತ್ತದೆ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆ ನೀಡಿದಂತಾಗುತ್ತದೆ ಎಂದರು.
ಮನೆಗೊಂದು ಸಸಿ ನೆಟ್ಟು ಅದನ್ನು ತಮ್ಮ ಮಕ್ಕಳಂತೆ ಪೋಷಿಸದೇ ಹೋದಲ್ಲಿ ಮುಂದಿನ ಪೀಳಿಗೆಗೆ ಉಳಿಗಾಲವಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸಸಿ ನೆಟ್ಟು ಪೋಷಿಸಲು ಮುಂದಾಗಬೇಕು. ಎಂದರು. ಶಿಲೇಮಾಕಲಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಗ್ರಾಮದ ಪ್ರತಿಯೊಂದು ಮನೆಗೂ ಸಸಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರಿಗೆ ಕ.ಸಾ.ಪ ವತಿಯಿಂದ ಡಾ.ಎಲ್.ನಾರಾಯಣರೆಡ್ಡಿ ಕೃಷಿ ವಿಚಾರಗಳ ಬಗ್ಗೆ ರಚಿಸಲಾಗಿರುವ ‘ಈ ಭೂಮಿ ಈ ಸಸ್ಯ’ ಎಂಬ ಪುಸ್ತಕ ಸೇರಿದಂತೆ ಒಂದೊಂದು ಸಸಿಯನ್ನು ನೀಡಲಾಯಿತು.
ಹಂಡಿಗನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಯಪ್ಪ, ಗಮ ಪಂಚಾಯತಿ ಸದಸ್ಯ ಎ.ಎಂ.ತ್ಯಾಗರಾಜು, ಕಾರ್ಯದರ್ಶಿ ಶ್ರೀನಿವಾಸ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಅಧಿಕಾರಿ ಶಾಂತ, ಕ.ಸಾ.ಪ ಕಾರ್ಯದರ್ಶಿ ವೆಂಕಟೇಶಪ್ಪ, ಮುನಿಯಪ್ಪ, ಗ್ರಾಮದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಮುನಿರಾಜು, ಕೃಷ್ಣಾರೆಡ್ಡಿ, ಮೋಹನ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.