ಗಂಗಾಕಲ್ಯಾಣ ಯೋಜನೆಯಡಿ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಪ್ರವಾಸಿಮಂದಿರದ ಆವರಣದಲ್ಲಿ ಶನಿವಾರ ತಾಲ್ಲೂಕಿನ ೧೧ ಮಂದಿ ಫಲಾನುಭವಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಕೊರೆಯಲಾಗಿದ್ದ ಕೊಳವೆಬಾವಿಗಳಿಗೆ ಪಂಪು ಮೋಟಾರ್, ಕೇಬಲ್ ಸೇರಿದಂತೆ ಸಲಕರಣೆಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ತೀವ್ರ ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿಯಲ್ಲಿ ಜೀವಿಸುತ್ತಿರುವ ಈ ದಿನಗಳಲ್ಲಿ ರೈತರು ತಮಗಿರುವ ತುಂಡು ಭೂಮಿಗಳಲ್ಲಿ ಬೆಳೆ ಬೆಳೆಯಲು ನೀರಿನ ಅಭಾವದಿಂದಾಗಿ ಸಂಕಷ್ಟ ಎದುರಿಸುವಂತಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಲಕ್ಷಾಂತರ ರೂಪಾಯಿಗಳನ್ನು ಬಂಡವಾಳ ಹೂಡಿಕೆ ಮಾಡಿ ಕೊಳವೆಬಾವಿಗಳನ್ನು ಕೊರೆಸಲು ಸಾಧ್ಯವಿಲ್ಲದ ಕಾರಣ ಸರ್ಕಾರ ಒಂದೊಂದು ಕೊಳವೆಬಾವಿಗೆ ೩ ಲಕ್ಷ ರೂಪಾಯಿಗಳಿಗೆ ಅನುದಾನ ಏರಿಕೆ ಮಾಡಿದೆ. ಪ್ರಸ್ತುತ ವರ್ಷದಲ್ಲಿ ೯೮ ಕೊಳವೆಬಾವಿಗಳನ್ನು ಕೊರೆಯಿಸಲು ಟೆಂಡರ್ ನೀಡಲಾಗಿದೆ.
ಫಲಾನುಭವಿಗಳು ಮಧ್ಯವರ್ತಿಗಳ ಬಳಿಗೆ ಹೋಗಿ ವಿನಾಕಾರಣ ಹಣವನ್ನು ವ್ಯಯ ಮಾಡಬಾರದು. ಶಾಸಕರು ಒಮ್ಮೆ ಫಲಾನುಭವಿಗಳ ಪಟ್ಟಿಯನ್ನು ಆಯ್ಕೆ ಮಾಡಿಕಳುಹಿಸಿದ ನಂತರ ಶಿಪಾರಸ್ಸುಗಳನ್ನು ತೆಗೆದುಕೊಂಡು ಹೋಗಿ ಹೆಸರುಗಳನ್ನು ಬದಲಾವಣೆ ಮಾಡುವಂತಹ ಯಾವುದೇ ಪ್ರಯತ್ನಗಳನ್ನು ಮಾಡಬಾರದು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಾಮಾಕ್ಷಮ್ಮ, ಕ್ಷೇತ್ರಾಭಿವೃದ್ಧಿ ಅಧಿಕಾರಿ ಶೇಖರ್, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್. ಮಾಜಿ ಸದಸ್ಯ ಗಂಜಿಗುಂಟೆ ನರಸಿಂಹಮೂರ್ತಿ, ರಾಮಬಾಬು, ಬಿ.ಕೆ.ದ್ಯಾವಪ್ಪ, ಕೆ.ಎಸ್.ಕನಕಪ್ರಸಾದ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -