ಅವಿಭಾಜ್ಯ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ರೈತರನ್ನು ಮೀಟರ್ ಬಡ್ಡಿದಂಧೆಯಿಂದ ಪಾರುಮಾಡುವ ಉದ್ದೇಶದಿಂದ ಡಿ.ಸಿ.ಸಿ.ಬ್ಯಾಂಕಿನ ಮೂಲಕ ೩ ಲಕ್ಷ ರೂಪಾಯಿಗಳವರೆಗೂ ಬಡ್ಡಿರಹಿತ ಸಾಲವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಕೋಲಾರ ಡಿ.ಸಿ.ಸಿ.ಬ್ಯಾಂಕಿನ ಜಿಲ್ಲಾಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಹೇಳಿದರು.
ನಗರದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಶನಿವಾರ ಆಯೋಜನೆ ಮಾಡಲಾಗಿದ್ದ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು ೧ ಕೋಟಿ ೭೦ ಲಕ್ಷ ರೂಪಾಯಿಗಳ ಸಾಲವನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ತೀವ್ರ ನೀರಿನ ಭವಣೆ ಅನುಭವಿಸುತ್ತಿರುವ ಅವಿಭಾಜ್ಯ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ರೈತರು ಸಂಕಷ್ಟದಲ್ಲಿದ್ದು, ಜೀವನ ನಿರ್ವಹಣೆ ಮಾಡಲು ಅನಿವಾರ್ಯವಾಗಿ ಮೀಟರ್ ಬಡ್ಡಿದಂಧೆಗೆ ಸಿಲುಕುತ್ತಿದ್ದಾರೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬಡ್ಡಿರಹಿತ ಸಾಲ ವಿತರಣೆ ಮಾಡಲಾಗುತ್ತಿದೆ. ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೂ ಕೂಡಾ ಸಾಲಗಳನ್ನು ವಿತರಣೆ ಮಾಡುತ್ತಿದ್ದು, ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಬ್ಯಾಂಕುಗಳನ್ನು ಉಳಿಸುವ ಮೂಲಕ ಆರ್ಥಿಕವಾಗಿಯೂ ಸಬಲರಾಗಬೇಕು. ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಉತ್ಪಾದಕರು ಕೂಡಾ ಸಹಕಾರಿ ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದು ವ್ಯವಹರಿಸುವ ಮೂಲಕ ಬ್ಯಾಂಕುಗಳ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಮಹಿಳಾ ಸ್ವ ಸಹಾಯ ಸಂಘಗಳ ಪದಾಧಿಕಾರಿಗಳು, ಬ್ಯಾಂಕುಗಳಿಂದ ಪಡೆದುಕೊಳ್ಳುವಂತಹ ಸಾಲಗಳನ್ನು ನಿಗದಿತ ಉದ್ದೇಶಗಳಿಗೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿಯಾಗಬೇಕು. ತಮ್ಮ ದಿನನಿತ್ಯದ ಕಸಬುಗಳ ಜೊತೆಗೆ ಉಪಕಸುಬುಗಳನ್ನು ಮೈಗೂಡಿಸಿಕೊಂಡು ಸ್ವಾವಲಂಬನೆಯ ಜೀವನ ನಡೆಸಬೇಕು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತಹ ಹೊಣೆಗಾರಿಕೆ ಮಹಿಳೆಯರ ಮೇಲಿದೆ ಎಂದರು.
ತಾಲ್ಲೂಕಿನ ವಿವಿಧ ಗ್ರಾಮಗಳ ರೈತರಿಗೆ ಕೆ.ಸಿ.ಸಿ. ಸಾಲದ ಚೆಕ್ಕುಗಳು ಹಾಗೂ ಮಹಿಳಾ ಸಂಘಗಳಿಗೆ ಆರ್ಥಿಕ ಸಾಲವನ್ನು ನಗದು ರೂಪದಲ್ಲಿ ವಿತರಣೆ ಮಾಡಲಾಯಿತು.
ಕೋಚಿಮುಲ್ ನಿರ್ದೇಶಕ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ಮುನಿಯಪ್ಪ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಪಿ.ಶಿವಾರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಮುನಿಕೃಷ್ಣಪ್ಪ, ಎಸ್.ಎಫ್.ಸಿ.ಎಸ್ ಬ್ಯಾಂಕಿನ ಅಧ್ಯಕ್ಷ ರಾಮಚಂದ್ರಪ್ಪ, ನಿರ್ದೇಶಕ ಎಂ.ರಾಮಣ್ಣ, ರಾಘವೇಂದ್ರ, ವ್ಯವಸ್ಥಾಪಕಿ ದೇವಿಕಾ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಪಂಚಾಯತಿ ಸದಸ್ಯ ಕೆ.ಲಕ್ಷ್ಮೀನಾರಾಯಣರೆಡ್ಡಿ, ಆರೀಫುಲ್ಲಾ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -