Home News ತಾಲ್ಲೂಕಿನ ಸುಗಟೂರು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನದಿನಾಚರಣೆ

ತಾಲ್ಲೂಕಿನ ಸುಗಟೂರು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನದಿನಾಚರಣೆ

0

ಪ್ರತಿಯೊಬ್ಬರಲ್ಲಿಯೂ ವೈಜ್ಞಾನಿಕ ಮನೋಭಾವನೆಯು ಬೆಳೆಯಬೇಕು. ಎಲ್ಲವನ್ನೂ ವೈಜ್ಞಾನಿಕವಾಗಿ ಚಿಂತನೆಗೊಳಪಡಿಸಿ ಆಚರಣೆಗೆ ತಂದುಕೊಳ್ಳಬೇಕು. ಆಗ ಅನೇಕ ಮೌಡ್ಯಾಚರಣೆಗಳನ್ನು ತೊಡೆದುಹಾಕಬಹುದು ಎಂದು ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.
ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕಶಾಲಾ ಆವರಣದಲ್ಲಿ ಸುಂದರಲಾಲ್ ಬಹುಗುಣ ಇಕೋಕ್ಲಬ್ ವತಿಯಿಂದ ರಾಷ್ಟ್ರೀಯ ವಿಜ್ಞಾನದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಜ್ಞಾನ ವಸ್ತುಪ್ರದರ್ಶನ, ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಜ್ಞಾನವೆಂಬುದು ಎರಡು ಅಲುಗಿನ ಕತ್ತಿಯಾಗಿದ್ದು, ಅದನ್ನು ದೇಶದ ಅಭಿವೃದ್ದಿಗೂ, ಪ್ರಪಂಚ ವಿನಾಶಕ್ಕೂ ಬಳಸಬಹುದು. ಮೌಢ್ಯಗಳ ಆಚರಣೆ, ಮೂಢನಂಬಿಕೆಗಳ ಅಳವಡಿಕೆಯಿಂದ ಸಾಕಷ್ಟು ಮಂದಿ ಮೋಸಹೋಗುತ್ತಿದ್ದಾರೆ. ಜ್ಯೋತಿಷ್ಯದಂತಹ ವಿಷಯಗಳನ್ನು ವೈಜ್ಞಾನಿಕವಾಗಿ ಅರಿಯಬೇಕು. ಮೂಢನಂಬಿಕೆಯನ್ನೇ ಬಂಡವಾಳ ಮಾಡಿಕೊಂಡು ಜನರನ್ನು ತಪ್ಪುದಾರಿಗೆಳೆದು ಬದುಕುವಂತಹವರಿಗೆ ಜನರೇ ಬುದ್ಧಿ ಕಲಿಸಬಹುದಾಗಿದೆ ಎಂದರು.
ಶಿಕ್ಷಕ ಎ.ಬಿ.ನಾಗರಾಜು ಮಾತನಾಡಿ, ಪ್ರಾಚೀನ ಕಾಲದಿಂದಲೂ ಭಾರತೀಯ ಋಷಿಗಳು ವಿಜ್ಞಾನಕ್ಕೆ ನೀಡಿದ ಕೊಡುಗೆ ಅಪಾರವಾದುದು. ಭಾರತೀಯ ವಿಜ್ಞಾನಿಗಳು ಪ್ರಪಂಚದಲ್ಲಿಯೇ ಉತ್ತಮ ಸಾಧನೆ ಮಾಡಿದ್ದು ಇತರೆ ದೇಶದ ವಿಜ್ಞಾನಿಗಳಿಗೆ ಮಾದರಿಯಾಗಿದ್ದಾರೆ. ವೈಜ್ಞಾನಿಕ ಅಂಶಗಳನ್ನು ಅರಿತು ಬದುಕಿನ ಪ್ರತಿ ಚಟುವಟಿಕೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿಜ್ಞಾನಕ್ಕೆ ಸಂಬಂಧಪಟ್ಟಂತಹ ವಿದ್ಯುತ್ ಉತ್ಪಾದನೆ, ಎಲೆಕ್ಟ್ರೊ ಮ್ಯಾಗ್ನೆಟಿಕ್ ಇಂಡಕ್ಷನ್, ಬಯೋಗ್ಯಾಸ್, ಸ್ಯಾವೇಜ್ ವಾಟರ್ ಸಿಸ್ಟಂ, ಸ್ಮಾರ್ಟ್ ಸಿಟಿ ನಿರ್ಮಾಣ, ಗ್ರಹಗಳ ಚಲನೆ, ನೀರಿನ ಸಂರಕ್ಷಣೆ, ಪವಾಡಬಯಲು, ರಾಕೆಟ್ ತತ್ವ, ವಿದ್ಯುತ್‌ಮಂಡಲಗಳು, ಮತ್ತಿತರ ವಿಷಯಗಳಿಗೆ ಸಂಬಂಧಿಸಿದ ಅನೇಕ ಪ್ರಯೋಗಗಳು ಜನಮನ ಗೆದ್ದವು. ಉತ್ತಮ ವಿಜ್ಞಾನ ಪ್ರದರ್ಶನಗಳಿಗೆ ಬಹುಮಾನಗಳನ್ನು ನೀಡಲಾಯಿತು. ವಿದ್ಯಾರ್ಥಿಗಳಿಗಾಗಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮುಖ್ಯಶಿಕ್ಷಕಿ ಉಮಾದೇವಿ, ಎಸ್‌ಡಿಎಂಸಿ ಮಾಜಿ ಸದಸ್ಯ ಬಚ್ಚೇಗೌಡ, ಶಿಕ್ಷಕ ಬಿ.ನಾಗರಾಜು, ಲಕ್ಷ್ಮಯ್ಯ, ಶಿಕ್ಷಕಿ ತಾಜೂನ್, ಹಾಜರಿದ್ದರು.

error: Content is protected !!