ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನೂತನವಾಗಿ ನಿರ್ಮಿಸಲಾಗಿರುವ ಕೈಗಾರಿಕೆ ತರಬೇತಿ ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ನಮ್ಮ ಭಾಗದ ಯುವಜನರು ತಾಂತ್ರಿಕ ತರಬೇತಿಯನ್ನು ಪಡೆದು ಒಳ್ಳೆಯ ಕೆಲಸ ಗಿಟ್ಟಿಸಿಕೊಳ್ಳಬೇಕು. ಶ್ರದ್ದೆ ಮತ್ತು ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಉದ್ಯೋಗಗಳು ತಮ್ಮ ಮನೆ ಬಾಗಿಲಿಗೆ ಹುಡುಕಿಕೊಂಡು ಬರುತ್ತವೆ ಎಂದು ಅವರು ತಿಳಿಸಿದರು.
ಗುಣಮಟ್ಟದ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ವಿವಿಧ ಕಂಪನಿಗಳು ಬಂದು ಉದ್ಯೋಗ ನೀಡುತ್ತಾರೆ. ಹಾಗಾಗಿ ಎಸ್ ಎಸ್ ಎಲ್ ಸಿ ನಂತರ ಎರಡು ವರ್ಷಗಳ ಕಾಲ ಐಟಿಐ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶಿಸ್ತು ಮತ್ತು ಶ್ರದ್ದಾ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದರು.
ಈ ಹಿಂದೆ ತಾಲ್ಲೂಕಿನ ಐಟಿಐ ವಿದ್ಯಾರ್ಥಿಗಳು ಹೊರಗಡೆ ಹೋಗಿ ಐಟಿಐ ಓದುವ ಪರಿಸ್ಥಿತಿಯಿತ್ತು. ಅದನ್ನು ಮನಗಂಡು ತಾಲ್ಲೂಕಿನ ತಿಪ್ಪೇನಹಳ್ಳಿ ಬಳಿ ಸುಸಜ್ಜಿತ ಐಟಿಐ ಕಾಲೇಜು ನಿರ್ಮಿಸಲಾಗಿದೆ. ಕಾಲೇಜಿಗೆ ಅಗತ್ಯವಿರುವ ಕಾಂಪೌಂಡ್ ಸೇರಿದಂತೆ ನೀರು ಪೂರೈಸಲು ಕೊಳವೆಬಾವಿ ಕೊರೆಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎನ್.ಮುನಿಯಪ್ಪ, ಎಸ್.ಎಂ.ನಾರಾಯಣಸ್ವಾಮಿ, ಆರ್.ಶ್ರೀನಿವಾಸ್, ರೈತಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಬಿ.ವಿ.ಮುನೇಗೌಡ ಹಾಜರಿದ್ದರು.