ನರೇಗಾ ಯೋಜನೆಯಡಿ ಅಂತರ್ಜಲ ವೃದ್ಧಿ, ಪರಿಸರ ಸಂರಕ್ಷಣೆಗೆ ಅಗತ್ಯವಿರುವ ಹಲವಾರು ಕಾಮಗಾರಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಜಿಲ್ಲಾ ಮಟ್ಟದ ಮೆಚ್ಚುಗೆಗೆ ಪಾತ್ರರಾಗಿದ್ದ ತಾಲ್ಲೂಕಿನ ಈ.ತಿಮ್ಮಸಂದ್ರ ಗ್ರಾಮ ಪಂಚಾಯಿತಿ ಪಿ.ಡಿ.ಒ ತನ್ವೀರ್ ಅಹಮದ್ ಅವರ ಸೇವಾಕ್ಷಮತೆಯನ್ನು ಗುರುತಿಸಿ ಜಿಲ್ಲಾಡಳಿತ 2018-19 ನೇ ಸಾಲಿನ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ.
ಜಿಲ್ಲಾ ಕೇಂದ್ರದಲ್ಲಿ ಈಚೆಗೆ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್ ಅವರು ಪಿ.ಡಿ.ಒ ತನ್ವೀರ್ ಅಹಮದ್ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸೇವಾ ಸೌಲಭ್ಯಗಳು ಒದಗಿಸಲು ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ ನಿರ್ಮಿಸಲು ಮುಂದಾಗಿರುವ ಪಿ.ಡಿ.ಒ ತನ್ವೀರ್ ಅಹಮದ್, ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರೊಂದಿಗೆ ನರೇಗಾ ಯೋಜನೆಯಡಿ ಶಾಲಾ ಕಟ್ಟಡ, ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಮಳೆಕೊಯ್ಲು ಅಳವಡಿಕೆ, ಅಂತರ್ಜಲ ವೃದ್ಧಿಗಾಗಿ ಕೆರೆಕುಂಟೆಗಳ ಹಾಗೂ ಕಲ್ಯಾಣಿ ಅಭಿವೃದ್ಧಿ, ಕಮಾನು ಚೆಕ್ ಡ್ಯಾಂಗಳ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ ಹಾಗೂ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿದ್ದಾರೆ.
ಗ್ರಾಮಸ್ಥರಿಗೆ ವಾಯುವಿಹಾರಕ್ಕೆ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಗ್ರಾಮೀಣ ಉದ್ಯಾನವನ, ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಪ್ರತಿಭೆಗಳಿಗೆ ಅನುಕೂಲವಾಗಲೆಂದು ಸರ್ಕಾರಿ ಶಾಲೆಗೆ ಆಟದ ಮೈದಾನ ಮತ್ತು ಬ್ಯಾಸ್ಕೆಟ್ ಬಾಲ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ. ಸಾಂಪ್ರದಾಯಿಕ ಜಲಮೂಲಗಳ ಸಂರಕ್ಷಣೆ ಕಾರ್ಯಕ್ರಮದಡಿ ಹಾಳುಬಿದ್ದಿದ್ದ ತೆರೆದ ಬಾವಿಗಳನ್ನು ಪುನಶ್ಚೇತನಗೊಳಿಸಿ ನೀರಿನ ಬವಣೆ ನೀಗಿಸಲು ಪ್ರಯತ್ನಿಸಿದ್ದಾರೆ.