ಪೊಲೀಸರ ಮತ್ತು ನಾಗರಿಕರ ನಡುವಿನ ಬಾಂಧವ್ಯ ಉತ್ತಮವಾಗಿದ್ದರೆ ಕಾನೂನು ವ್ಯವಸ್ಥೆ ಸಹ ಉತ್ತಮವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ರೆಡ್ಡಿ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೋಮವಾರ ತಾಲ್ಲೂಕಿನ ವರದನಾಯಕನಹಳ್ಳಿಯ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶಿಡ್ಲಘಟ್ಟ ವೃತ್ತ ಮಟ್ಟದ ನೂತನ ಬೀಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಅಕ್ರಮ ಹಾಗು ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಲು ಮುಂದಾಗಬೇಕು. ಅಕ್ರಮ ಮಧ್ಯ ಮಾರಾಟ ಸೇರಿದಂತೆ ಅಕ್ರಮ ಮರಳು ದಂಧೆ, ಜೂಜಾಟ, ಕಳ್ಳತನ ಇಂತಹವುಗಳ ಬಗ್ಗೆ ನಾಗರಿಕರು ಬೀಟ್ ಪೊಲೀಸರಿಗೆ ಮಾಹಿತಿ ನೀಡಿ. ಒಂದು ವೇಳೆ ತಾವು ನೀಡಿದ ಮಾಹಿತಿಯನ್ವಯ ಪೊಲೀಸ್ ಪೇದೆ ಕ್ರಮ ಜರುಗಿಸಲಿಲ್ಲ ಎಂದಾದರೆ ನಾವು ಅಂತಹವರ ಮೇಲೆ ಕ್ರಮ ಜರುಗಿಸುತ್ತೇವೆ ಎಂದರು.
ಇನ್ನು ತಾಲ್ಲೂಕಿನಾದ್ಯಂತ ಅಕ್ರಮ ಮಧ್ಯ ಮಾರಾಟ ಸೇರಿದಂತೆ ಅಕ್ರಮ ಮರಳು ದಂಧೆಯ ಬಗ್ಗೆ ಕ್ರಮ ತೆಗೆದುಕೊಂಡಿದ್ದು ಮರಳು ಸಾಗಣಿಕೆ ತಡೆಯಲಾಗಿದೆ. ಉಳಿದಂತೆ ಗ್ರಾಮಗಳಲ್ಲಿ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವ ಬಗ್ಗೆ ಬೀಟ್ ಪೊಲೀಸರು ಮಾಹಿತಿ ಸಂಗ್ರಹಿಸಬೇಕು. ಇಂದಿನ ಸಭೆಯಲ್ಲಿ ಚರ್ಚಿಸಲಾಗಿರುವ ಸಮಸ್ಯೆಗಳೇ ಮುಂದಿನ ಸಭೆಯಲ್ಲಿ ಚರ್ಚೆಯಾದರೆ ಆಯಾ ವ್ಯಾಪ್ತಿ ಬೀಟ್ ಪೊಲೀಸರನ್ನು ಹೊಣೆ ಮಾಡಬೇಕಾಗುತ್ತದೆ. ಹಾಗಾಗಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ತಡೆಯಲು ಪೊಲೀಸರು ಮತ್ತಷ್ಟು ಜನಸ್ನೇಹಿಯಾಗಿ ಕರ್ತವ್ಯ ಮಾಡಬೇಕು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಮುಖಂಡರು ಸೇರಿದಂತೆ ನಾಗರಿಕರು ತಾಲ್ಲೂಕಿನಾಧ್ಯಂತ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟುವಂತೆ ಮನವಿ ಮಾಡಿದರು.
ನಗರದ ಮುಖ್ಯರಸ್ತೆಗಳಲ್ಲಿ ಅಡ್ಡಾ ದಿಡ್ಡಿ ವಾಹನ ನಿಲ್ಲಿಸುವುದನ್ನು ತಪ್ಪಿಸಲು ಪೊಲೀಸರು ಕ್ರಮ ಜರುಗಿಸಬೇಕು ಎಂದು ಸಭೆಗೆ ತಿಳಿಸಿದರು.
ಸರ್ಕಲ್ ಇನ್ಸ್ಪೆಕ್ಟರ್ ವೆಂಕಟೇಶ್, ನಗರಠಾಣೆ ಪಿಎಸ್ಸೈ ನವೀನ್, ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.