ಪ್ರತಿಯೊಬ್ಬ ಗ್ರಾಮ ಪಂಚಾಯತಿ ಸದಸ್ಯರೂ ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಿಸಿಕೊಳ್ಳಲು ಗ್ರಾಮಸ್ಥರನ್ನು ಮನವೊಲಿಸುವ ಮೂಲಕ ಬಯಲು ಶೌಚ ಮುಕ್ತ ಗ್ರಾಮ ಪಂಚಾಯತಿಯನ್ನಾಗಿಸಬೇಕೆಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಪಂಚಾಯತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಂಡಿಗನಾಳ ಪಂಚಾಯತಿಯಲ್ಲಿ ಒಟ್ಟು 11 ಗ್ರಾಮಗಳಲ್ಲಿ 451 ಕುಟುಂಬಗಳಿಗೆ ಶೌಚಾಲಯವಿಲ್ಲ. ಸರ್ಕಾರದಿಂದ ಸಿಗುವ ಅನುದಾನದ ಬಗ್ಗೆ ಹಾಗೂ ಶುಚಿತ್ವದ ಬಗ್ಗೆ ಮನವರಿಕೆ ಮಾಡಿಕೊಟ್ಟು ಎಲ್ಲಾ ಕುಟುಂಬಗಳೂ ಶೌಚಾಲಯ ನಿರ್ಮಿಸಿಕೊಳ್ಳಲು ತಿಳಿಹೇಳಬೇಕು.
ಬದು ನಿರ್ಮಾಣ, ದನದ ಕೊಟ್ಟಿಗೆ ಮತ್ತು ಕೊಳವೆ ಬಾವಿಗಳಿಗೆ ಇಂಗುಗುಂಡಿ ನಿರ್ಮಿಸಿಕೊಳ್ಳಲು ನರೇಗಾದಲ್ಲಿ 65 ಸಾವಿರ ರೂಗಳನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳುವಂತೆ ಸದಸ್ಯರು ತಿಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ನೀರಿನ ಕೊರತೆಯಿರುವ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷೆ ಶಾರದಮ್ಮ, ಸದಸ್ಯರಾದ ಜಯರಾಮ್, ಎ.ಎಂ.ತ್ಯಾಗರಾಜ್, ಉಮಾ, ನೇತ್ರಾವತಿ, ಮಹದೇವಯ್ಯ, ನರಸಿಂಹಮೂರ್ತಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -