Home News ಮನುಕುಲವೆಲ್ಲಾ ಒಂದೇ

ಮನುಕುಲವೆಲ್ಲಾ ಒಂದೇ

0

ದೇಶದಲ್ಲಿ ತಾಂಡವವಾಡುತ್ತಿರುವ ಜಾತಿ ಪದ್ದತಿ, ಅಸಮಾನತೆ ತೊಲಗಿ ಮನುಕುಲವೆಲ್ಲಾ ಒಂದೇ ಎಂಬ ಭಾವನೆ ಮೂಡಿದಾಗ ಮಾತ್ರ ಡಾ.ಬಿ.ಆರ್.ಅಂಬೇಡ್ಕರ್ ಹಾಗು ಅವರು ರಚಿಸಿದ ಸಂವಿಧಾನಕ್ಕೆ ಅರ್ಥ ಸಿಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಕೇನಹಳ್ಳಿ ಗ್ರಾಮದಲ್ಲಿ ಬುಧವಾರ ತಾಲ್ಲೂಕು ದಸಂಸ ವತಿಯಿಂದ ಏರ್ಪಡಿಸಲಾಗಿದ್ದ ಬುದ್ದ ಪೌರ್ಣಿಮೆ ಹಾಗು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ಈ ದೇಶದ ಶೋಷಿತ ವರ್ಗದ ಮೇಲೆ ನಡೆಯುತ್ತಿದ್ದ ದೌರ್ಜನ್ಯ ದಬ್ಬಾಳಿಕೆ, ಶೋಷಣೆಯಿಂದಾಗಿ ನಿರಂತರವಾದ ಚಿಂತನೆ ನಡೆಸಿದ ಡಾ.ಅಂಬೇಡ್ಕರ್ ಅವರು ದೇಶದ ಸಮಸ್ತ ಜನರಿಗೂ ನಿಜವಾದ ಸ್ವಾತಂತ್ರ್ಯ ಮತ್ತು ಉತ್ತಮ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಸಂವಿಧಾನ ರಚಿಸಿದರು. ಎಲ್ಲಾ ವರ್ಗದವರಿಗೂ ಸಮಾನ ಹಕ್ಕು ನೀಡಬೇಕೆಂಬ ಉದ್ದೇಶದಿಂದ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿ, ಸಮಾಜದ ಏಳಿಗೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರತಿಪಾದಿಸಿದರು ಎಂದರು.
ಕಾರ್ಯಕ್ರಮದಲ್ಲಿ ದಸಂಸ ರಾಜ್ಯಾಧ್ಯಕ್ಷ ಎನ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜನ್ಮ, ಬಾಲ್ಯ, ಸಂಕಷ್ಟದ ಬದುಕು, ಓದಬೇಕೆಂಬ ಅಭಿಲಾಷೆ, ಛಲ, ಗುರಿಯೆಡೆಗೆ ಸಾಧನೆ, ಬರೋಡಾದ ಮಹಾರಾಜರು ನೀಡಿದ ವಿದ್ಯಾರ್ಥಿವೇತನದ ಸಹಾಯದಿಂದ ವಿದೇಶದಲ್ಲಿ ಪದವಿಯನ್ನು ಪಡೆದು ಭಾರತಕ್ಕೆ ಹಿಂದಿರುಗಿ ಹಿಂದುಳಿದ ಜನಾಂಗಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸಲ್ಲಿ ನಿರತರಾದುದು ಹಾಗು ಜಗತ್ತಿನ ಎಲ್ಲಾ ಧರ್ಮಗಳ ಬಗ್ಗೆ ಅಧ್ಯಯನ ನಡೆಸಿ ಕೊನೆಗೆ ಭಾರತದಲ್ಲಿ ಬೌದ್ದ ಧರ್ಮವನ್ನು ಪುನರ್ ಪ್ರತಿಷ್ಠಪಿಸುವ ಮೂಲಕ ತಾವು ಹಾಗು ತಮ್ಮೊಂದಿಗೆ ಲಕ್ಷಾಂತರ ಜನರನ್ನು ಬೌದ್ದ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದೇಶದಲ್ಲಿದ್ದ ಜಾತಿಪದ್ದತಿಯನ್ನು ಹೋಗಲಾಡಿಸಲು ಬುನಾದಿ ಹಾಕಿದರು ಎಂದರು.
ದಲಿತ ಮುಖಂಡ ಗಂಜಿಗುಂಟೆ ನರಸಿಂಹಮೂರ್ತಿ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಇಂದು ಪ್ರತಿಯೊಬ್ಬರೂ ಆರ್ಥಿಕ ಹಾಗು ಶೈಕ್ಷಣಿಕವಾಗಿ ಮುಂದುವರೆದಿದ್ದರೂ ಸಾಮಾಜಿಕವಾಗಿ ಹಿಂದುಳಿದಿದ್ದೇವೆ. ಸಂವಿದಾನ ನಮಗೆ ನೀಡಿರುವ ಎಲ್ಲಾ ಸವಲತ್ತುಗಳನ್ನು ಪಡೆಯುತ್ತಿದ್ದೇವಾದರೂ ಅಂಬೇಡ್ಕರ್‌ರ ತತ್ವ ಸಿದ್ದಾಂತಗಳನ್ನು ನಾವು ಯಾರು ಅಳವಡಿಸಿಕೊಳ್ಳುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕ ಸಿ.ಎಂ.ಮುನಿಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆನಂದರೆಡ್ಡಿ, ದಸಂಸ ತಾಲ್ಲೂಕು ಸಂಚಾಲಕರಾದ ಎನ್.ವೆಂಕಟೇಶ್, ಟಿ.ವಿ.ಚಲಪತಿ, ಮುಖಂಡರಾದ ದ್ಯಾವಕೃಷ್ಣಪ್ಪ, ನಾಗ ನರಸಿಂಹ, ರವಿಶಂಕರ್, ಲಕ್ಷ್ಮಿನಾರಾಯಣ, ಎಲ್.ವಿ.ವೆಂಕಟೇಶ್, ರಾಂಬಾಬು ಸೇರಿದಂತೆ ದಸಂಸ ಪದಾಧಿಕಾರಿಗಳು ಹಾಜರಿದ್ದರು.

error: Content is protected !!