ಮೀಸಲಾತಿಯ ಸ್ವಾತಂತ್ರ್ಯವನ್ನು ಮಹಿಳೆಯರು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಬದಲಾವಣೆಯನ್ನು ತರಬೇಕು ಎಂದು ಸಿವಿಲ್ ನ್ಯಾಯಾಧೀಶರಾದ ಎನ್. ಶ್ರೀಕಂಠ ಹೇಳಿದರು.
ನಗರದ ಸ್ರೀ ಶಕ್ತಿ ಭವನದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಮಹಿಳೆಯರಿಗಾಗಿ ಶೇ. ೫೦ ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದ್ದರೂ ಕೂಡಾ ಮಹಿಳೆಯರಿಗೆ ನೀಡುತ್ತಿರುವ ಸ್ವಾತಂತ್ರ್ಯವನ್ನು ಪುರುಷರು ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮಹಿಳೆಯರು ಆಡಳಿತ ನಡೆಸುವುದಕ್ಕೆ ಅಡ್ಡಿಯಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿರುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡರೆ, ಸಮಾಜದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ, ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿರುವುದರಿಂದ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ಮಹಿಳೆಯರು, ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುವ ಮೂಲಕ ಸಮಾಜದಲ್ಲಿ ಸುಧಾರಣೆ ತರಬಹುದು ಎಂದರು.
ಸಿ.ಡಿ.ಪಿ.ಓ.ಲಕ್ಷ್ಮೀದೇವಮ್ಮ ಮಾತನಾಡಿ, ಮಹಿಳೆಯರು ಕುಟುಂಬಗಳ ನಿರ್ವಹಣೆಗಷ್ಟೆ ಸೀಮಿತವಾಗದೆ, ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ, ಮಕ್ಕಳಿಗೆ ಮೌಲ್ಯಾಧಾರಿತವಾದ ಶಿಕ್ಷಣವನ್ನು ಕೊಡಿಸುವುದರ ಜೊತೆಗೆ ಆರ್ಥಿಕವಾಗಿ ಸಬಲರಾಗುವ ಕಡೆಗೆ ಹೆಚ್ಚು ಗಮನಹರಿಸಬೇಕು. ಮಕ್ಕಳ ಮುಂದಿನ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕು. ಪೌಷ್ಟಿಕ ಆಹಾರವನ್ನು ಒದಗಿಸಿ ಆರೋಗ್ಯವಂತರಾಗಿ ಜೀವಿಸುವಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಕುಟುಂಬಕ್ಕೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳುವತ್ತ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಜಾಗೃತಿ ಮೂಡಿಸುವುದರಿಂದ ಮಹಿಳೆಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಬಹುದಾಗಿದೆ. ಹೆಣ್ಣು ಮಕ್ಕಳು ಉತ್ತಮವಾದ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಉನ್ನತಸ್ಥಾನಗಳನ್ನು ಅಲಂಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಒಟ್ಟು ಕುಟುಂಬ ಮತ್ತು ಪಿತ್ರಾರ್ಜಿತ ಆಸ್ತಿಗಳಲ್ಲಿ ಮಹಿಳೆಯರಿಗೆ ಇರುವ ಹಕ್ಕುಗಳು ಹಾಗೂ ಕಾನೂನಿನಡಿಯಲ್ಲಿ ಮಹಿಳೆಯರಿಗಿರುವ ಸೌಲಭ್ಯಗಳ ಕುರಿತು, ವಕೀಲೆ ಲಕ್ಷ್ಮಮ್ಮ ಮಹಿಳೆಯರಿಗೆ ಜಾಗೃತಿ ಮೂಡಿಸಿದರು.
೨೦೧೫-–೧೬ ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ಶಿಕ್ಷಕಿಯರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.
ತಹಶೀಲ್ದಾರ್ ಕೆ.ಎಂ.ಮನೋರಮಾ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಪಾಪಿರೆಡ್ಡಿ, ಸರ್ಕಾರಿ ವಕೀಲ ಈ.ಡಿ.ಶ್ರೀನಿವಾಸ್, ವಕೀಲರ ಸಂಘದ ಕಾರ್ಯದರ್ಶಿ ವಿ.ಎಂ.ಬೈರಾರೆಡ್ಡಿ ಮುಂತಾದವರು ಹಾಜರಿದ್ದರು.