ಕರೋನ ಭೀತಿ ಹಿನ್ನೆಲೆಯಲ್ಲಿ, ಕೆಲ ಔಷಧಿ ಅಂಗಡಿಗಳವರು ಮಾಸ್ಕ್ ಮತ್ತು ಸ್ಯಾನಿಟೈಸರ್ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದದ್ದರಿಂದ ನಗರದ ಕೆಲವು ಔಷಧಿ ಅಂಗಡಿಗಳಿಗೆ ಬುಧವಾರ ಆರೋಗ್ಯ ನಿರೀಕ್ಷಕರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಂದಾಯ ಇಲಾಖೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ವಿವಿಧ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕ ನಾರಾಯಣಸ್ವಾಮಿ ಮಾತನಾಡಿ, ಮಾಸ್ಕ್ ಗಳಿಗೆ ಹೆಚ್ವು ಬೇಡಿಕೆ ಇರುವುದರಿಂದ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಬಂದಿತ್ತು. ಅದರಂತೆ ನಮ್ಮ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಮಾಸ್ಕ್ ಲಭ್ಯತೆ ಮತ್ತು ಅದರ ದರವನ್ನ ಸಾರ್ವಜಕರಿಗೆ ಕಾಣುವಂತೆ ಬೋರ್ಡ್ ಹಾಕಲು ಔಷಧಿ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದ್ದೇವೆ. ಸಗಟು ಮಾರಾಟದಾರರಿಂದ ಬಿಲ್ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಹೆಚ್ಚು ಬೆಲೆಗೆ ಮಾಸ್ಕ್ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಅಗತ್ಯವಿರುವರು ಮಾತ್ರ ಮಾಸ್ಕ್ ಬಳಸುವುದು ಉತ್ತಮ. ನೆಗಡಿ, ಕೆಮ್ಮು ಸೀನು ಇರುವಂತವರು ಮಾತ್ರ ಮಾಸ್ಕ್ ಧರಿಸುವುದು ಉತ್ತಮ ಎಂದು ಹೇಳಿದರು.
ಆಹಾರ ಇಲಾಖೆಯ ಶಿರಸ್ತೇದಾರ್ ಧನಲಕ್ಷ್ಮಿ, ಹೇಮಂತ್ ಹಾಜರಿದ್ದರು.