Home News ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

0

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆಯಾಗುವಂತಹ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವೈ.ಹುಣಸೇನಹಳ್ಳಿ ಹಾಗೂ ಶೀಗೆಹಳ್ಳಿ ಗ್ರಾಮಗಳಲ್ಲಿ ಗುರುವಾರ ಶಾಸಕರ ಅನುಧಾನದಲ್ಲಿ ಸುಮಾರು ೧೦ ಲಕ್ಷ ರೂಪಾಯಿಗಳ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಾಧ್ಯಂತ ಇರುವ ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು ಹಾಗೂ ಹಳ್ಳಿಗಳಲ್ಲಿ ಉತ್ತಮ ರಸ್ತೆ ಸೇರಿದಂತೆ ಚರಂಡಿ, ವಿದ್ಯುತ್ ಮತ್ತು ವಸತಿ ಸವಲತ್ತುಗಳನ್ನು ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ತಾಲ್ಲೂಕಿನ ಎಲ್ಲಾ ಕಡೆ ಶುದ್ಧ ನೀರಿನ ಘಟಕ ನಿರ್ಮಸಿ ನಾಗರಿಕರಿಗೆ ಶುದ್ಧೀಕರಿಸಿದ ಕುಡಿಯುವ ನೀರು ಪೂರೈಸಲೆಂದು ಈಗಾಗಲೇ ಹಲವೆಡೆ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳಲ್ಲಿ ನಿರ್ಮಿಸಲು ಒತ್ತು ನೀಡಲಾಗುವುದು ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಚುನಾಯಿತ ಪ್ರತಿನಿಧಿಗಳಿಂದ ಮಾತ್ರ ಸಾಧ್ಯವಿಲ್ಲ ಬದಲಿಗೆ ಗ್ರಾಮದಲ್ಲಿನ ಮುಖಂಡರ ಹಾಗೂ ನಾಗರಿಕರ ಸಹಕಾರವೂ ಅಗತ್ಯವಿದೆ ಎಂದರು.
ವೈ ಹುಣಸೇನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಹರಿಪ್ರಸಾದ್, ಉಪಾಧ್ಯಕ್ಷ ದೇವರಾಜ್, ಸದಸ್ಯರಾದ ಮಂಜುನಾಥ್, ಕಲ್ಪನಾರಾಜಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.