ನಗರದ ಟಿ.ಬಿ.ರಸ್ತೆಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮದೇವಿಯ ಹಸಿ ಕರಗ ಮಹೋತ್ಸವವು ಬುಧವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಬುಧವಾರ ಯುಗಾದಿಯ ದಿನ ರಾತ್ರಿ ನಡೆಯುವ ಹಸಿಕರಗದ ರಚನೆ ಬಹು ಕಟ್ಟುನಿಟ್ಟಾದ ಹಾಗೂ ಸಂಪ್ರದಾಯಬದ್ಧವಾದ ಕಾರ್ಯ. ಶಾಸ್ತ್ರಬದ್ಧವಾಗಿ ಹಸಿ ಮಣ್ಣಿನಿಂದ ಕರಗವನ್ನು ರೂಪಿಸುವ ಹಕ್ಕು ನಿರ್ದಿಷ್ಟವಾದ ಮನೆತನದವರಿಗೆ ಮಾತ್ರ ಮೀಸಲು. ಗರ್ಭಗುಡಿಯಲ್ಲಿ ನಡೆಯುವ ಈ ಕಾರ್ಯದ ರಹಸ್ಯವನ್ನು ಯಾರೂ ಹೊರಗೆಡಹಲು ಇಚ್ಛಿಸುವುದಿಲ್ಲ. ಸಂಜೆಯ ಸುಮಾರಿಗೆ ಕರಗ ಹೊತ್ತು ನಡೆಯುವ ವ್ಯಕ್ತಿಗೆ ವಪನ ಸಂಸ್ಕಾರ ಮಾಡಿ, ಕಂಕಣ ಕಟ್ಟಿ, ಕೈತುಂಬ ಕರಿ ಬಳೆ ತೊಡಿಸಿ, ಅಚ್ಚ ಮಲ್ಲಿಗೆಯ ಜಡೆಕುಚ್ಚುಗಳಿಂದ ಸಿಂಗರಿಸಿ, ಅರಿಶಿನದ ಸೀರೆ, ಕುಪ್ಪುಸ ಉಡಿಸಿ, ಆಭರಣಗಳಿಂದ ಅಲಂಕರಿಸಲಾಗಿತ್ತು. ಕರಗ ಹೊರುವ ವ್ಯಕ್ತಿ ನವವಧುವಿನಂತೆ ಶೋಭಿಸುತ್ತಿದ್ದರು.
ಅನಂತರ ಶಕ್ತಿಸ್ವರೂಪನಾದ ಆ ವ್ಯಕ್ತಿಗೆ ಧೂಪ ದೀಪಗಳಿಂದ ಮಂಗಳವಾದ್ಯಗಳೊಂದಿಗೆ ಶಾಸ್ತ್ರೋಕ್ತವಾದ ಪೂಜೆ ನಡೆಯಿತು. ಅನಂತರ ಹಣೆಗೆ ನಾಮ, ನಡುಪಟ್ಟಿ ಧರಿಸಿ ಕೈಯಲ್ಲಿ ಕತ್ತಿ ಹಿಡಿದ ಅಂಗರಕ್ಷಕರ ತಂಡದ ವೀರಕುಮಾರರ ಕಾವಲಿನಲ್ಲಿ ಕರಗ ಹೊರುವ ವ್ಯಕ್ತಿಯನ್ನು ನಡೆಮಡಿಯೊಂದಿಗೆ ದೇವಸ್ಥಾನಕ್ಕೆ ಕರೆತಂದರು. ಅಷ್ಟರಲ್ಲಿ ಅರಿಶಿನ, ಕುಂಕುಮ ಅಚ್ಚಮಲ್ಲಿಗೆ ಹೂವಿನಿಂದ ಅಲಂಕೃತವಾದ ಹಸಿಕರಗ ಸಿದ್ಧವಾಗಿತ್ತು. ಕರಗದ ಮೇಲೆ ಗೋಪುರದಂತೆ ಮಲ್ಲಿಗೆ ಹೂವಿನ ಅಲಂಕಾರವಿದ್ದು ತುದಿಯಿಂದ ಇಳಿಬಿಟ್ಟ ಹೂ ಸರಗಳನ್ನು ಹೊರುವವರ ಭುಜದಿಂದ ಕೆಳಕ್ಕೆ ಮಾಲೆಯಂತೆ ಹರಡಿಕೊಳ್ಳುವ ರೀತಿಯಲ್ಲಿ ಕಟ್ಟಿದ್ದರು.
ಕರಗವನ್ನು ಹೊತ್ತಮೇಲೆ ಮತ್ತೊಮ್ಮೆ ವಿಶೇಷ ಮಂಗಳಾರತಿಯಾದ ನಂತರ ಸ್ತುತಿಪದ್ಯಗಳನ್ನು ಹೇಳುವ ಪೂಜಾರಿ ಹಾಗೂ ವೀರಕುಮಾರರ ರಕ್ಷಣೆಯಲ್ಲಿ ಗುಡಿಯ ಅಂಗಳ ಬಿಟ್ಟ ಕರಗ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬೆಳಗಿನ ಜಾವಕ್ಕೆ ಮತ್ತೆ ಗರ್ಭಗುಡಿ ಪ್ರವೇಶಿಸಿತು.
ಕರಗದ ಸ್ವಾಗತಕ್ಕಾಗಿ ಪ್ರತಿ ಮನೆಯವರೂ ಮನೆ ಮುಂದೆ ಸಾರಿಸಿ ರಂಗೋಲಿಯನ್ನು ಹಾಕಿದ್ದರು. ಕರಗ ಬಂದಾಗ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿದರು. ಕರಗ ಮಹೋತ್ಸವವನ್ನು ನೋಡಲು ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದವರು ಕರಗದ ನರ್ತನಕ್ಕೆ ಚಪ್ಪಾಳೆ, ಶಿಳ್ಳೆಗಳ ಮುಖಾಂತರ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.
ರೇಣುಕಾ ಎಲ್ಲಮ್ಮ ದೇವಾಲಯದಿಂದ ಹೊರಟ ಕರಗ ನಗರದ ಓ.ಟಿ.ವೃತ್ತ, ಕೋಟೆ ವೃತ್ತಗಳು ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪೂಜೆಗಳನ್ನು ಸ್ವೀಕರಿಸಿತು.
- Advertisement -
- Advertisement -
- Advertisement -
- Advertisement -