ಶಾಶ್ವತ ನೀರಾವರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲ್ಲೂಕು ಘಟಕದ ಸದಸ್ಯರು ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸಿ ಒತ್ತಾಯಿಸಿದರು.
ನಗರದ ಬಸ್ ನಿಲ್ದಾಣದ ಬಳಿಯಿಂದ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿಯ ಮುಂದೆ ಧರಣಿಯನ್ನು ನಡೆಸಿದರು.
ನೊಂದ ಅನ್ನದಾತರ ಪರವಾಗಿ ಕರವೇ ಸದಸ್ಯರು ಹೋರಾಟ ನಡೆಸಿದ್ದೇವೆ. ಬರಪೀಡಿತ ಜಿಲ್ಲೆಗೆ ಶುದ್ಧ ಕುಡಿಯುವ ನೀರು ಬೇಕು. ಅದಕ್ಕಾಗಿ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಬೇಕು. ರೈತರ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆಂದು ಹೇಳಿದ ಸರ್ಕಾರ ಈಗ ಲೋಡ್ ಶೆಡ್ಡಿಂಗ್ ಮಾಡುತ್ತಿದೆ. ಇದರಿಂದ ಬೆಳೆಯನ್ನು ಬೆಳೆಯಲಾಗದೆ ರೈತರು ಕಂಗಾಲಾಗಿದ್ದಾರೆ. ರೈತರು ಕೃಷಿಗಾಗಿ ಬ್ಯಾಂಕುಗಳು ಹಾಗೂ ಸಹಕಾರಿ ಸಂಘಗಳಲ್ಲಿ ಸಾಲವನ್ನು ತೀರಿಸಲಾಗದೇ ಅನ್ನದಾತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿವೆ. ಸರ್ಕಾರ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು. ಜಿಲ್ಲೆಯ ಜನತೆ ಹೈನುಗಾರಿಕೆಯನ್ನು ನಂಬಿದ್ದಾರೆ. ಹಾಲಿನ ಬೆಲೆಯನ್ನು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಕರವೇ ಸದಸ್ಯರು ಅಧಿಕಾರಿಗಳಿಗೆ ಸರ್ಕಾರಕ್ಕೆ ಸಲ್ಲಿಸುವಂತೆ ಮನವಿಯನ್ನು ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲ್ಲೂಕು ಅಧ್ಯಕ್ಷ ಗಂಜಿಗುಂಟೆ ಜಿ.ಎಲ್.ವಸಂತ್ಕುಮಾರ್, ಸಂಚಾಲಕ ಆನಂದರೆಡ್ಡಿ, ಗೌರವಾಧ್ಯಕ್ಷ ಚೌಡರೆಡ್ಡಿ, ಸಂಚಾಲಕ ಆರ್.ನರಸಿಂಹರೆಡ್ಡಿ, ರೈತ ಮುಖಂಡರಾದ ಶಿವಾರೆಡ್ಡಿ, ಆರ್.ಆನಂದರೆಡ್ಡಿ, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.