ಹನ್ನೆರಡನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣವರು ಸಾರಿದ ತತ್ವ, ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಜನಾಂಗ ಬಸವಣ್ಣನವರ ತತ್ವ, ಆದರ್ಶಗಳನ್ನು ಅರಿತುಕೊಳ್ಳುವ ಮೂಲಕ ನಾಡಿನ ಏಳ್ಗೆಗೆ ಶ್ರಮಿಸುವಂತೆ ಬಸವೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸೋಮವಾರ ನಡೆದ ಬಸವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕಳಬೇಡ ಕೊಲಬೇಡ, ಹುಸಿಯ ನುಡಿಯಬೇಡ’, ‘ಕಾಯಕವೇ ಕೈಲಾಸ’ ವೆಂದು ಸಾರಿದ ಬಸವಣ್ಣನವರ ತತ್ವ ಆದರ್ಶಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ. ವಿಶ್ವ ಗುರು ಬಸವಣ್ಣ ಸಮಾಜದಲ್ಲಿ ಮೇಲು ಜಾತಿ, ಕೆಳಜಾತಿ ಎಂಬ ಭೇದ ಖಂಡಿಸಿ, ಸರ್ವ ಧರ್ಮದ ಶರಣರನ್ನು ಕೂಡಿಸಿ ಯಾವ ಧರ್ಮವೂ ಮೇಲಲ್ಲ, ಯಾವ ಧರ್ಮವೂ ಕೀಳಲ್ಲ ಎಂಬ ಮನೋಭಾವವನ್ನು ಜನರ ಮನಸ್ಸಿನಲ್ಲಿ ಬಿತ್ತುವಲ್ಲಿ ಶ್ರಮಿಸಿದರು. ಅಂತಹ ಮಹಾನ್ ಶರಣರ ಜೀವನಾದರ್ಶಗಳು ಇಂದಿನ ಸಮಾಜಕ್ಕೆ ಮಾದರಿಯಾಗಿದ್ದು, ಎಲ್ಲ ವರ್ಗದ ಜನರು ಸಮಾನರು ಎಂಬ ಅಂಶವನ್ನು ಅರಿತು ಈ ನಾಡಿನಲ್ಲಿ ಜೀವಿಸುವಂತಾಗಬೇಕು ಎಂದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್ ಮಾತನಾಡಿ, ಬಸವಣ್ಣನವರ ಕಾಲದಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ಕೊಡಲಾಗುತ್ತಿತ್ತು. ವ್ಯಕ್ತಿ ಮತ್ತು ಸಮಾಜದ ಪರಿವರ್ತನೆಗೆ ಬಸವಣ್ಣನ ವಚನ ಸಾಹಿತ್ಯ, ತತ್ವ ಆದರ್ಶಗಳು ದಾರಿದೀಪ. ಅವರ ವಿಚಾರಧಾರೆ ತತ್ವ ಆದರ್ಶ ಚಿಂತನೆಗಳನ್ನು ಮೈಗೂಡಿಸಿಕೊಂಡು, ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ನಾವೆಲ್ಲರೂ ನಡೆದು ಅವರ ಕನಸನ್ನು ನನಸು ಮಾಡಬೇಕೆಂದು ಹೇಳಿದರು.
ತಹಶೀಲ್ದಾರ್ ಮನೋರಮಾ, ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -







