ಅಪ್ರಾಪ್ತ ವಯಸ್ಕರನ್ನು ಕಾರ್ಖಾನೆ ಮತ್ತಿತರೆ ಕಡೆ ದುಡಿಮೆ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕೇವಲ ಕಾನೂನು ದೃಷ್ಟಿಯಿಂದ ಮಾತ್ರವಲ್ಲ, ಸಾಮಾಜಿಕವಾಗಿಯೂ ದುಷ್ಪರಿಣಾಮ ಬೀರಲಿದೆ ಎಂದು ಜೆಎಂಎಫ್ಸಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ‘ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ’ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹದಿನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡರೆ ಅದು ಶಿಕ್ಷಾರ್ಹ ಅಪರಾಧ. ಅಂತಹ ಸಂದರ್ಭದಲ್ಲಿ ಕೆಲಸಕ್ಕೆ ತೆಗೆದುಕೊಂಡವರಿಗೆ ದಂಡದ ಜತೆಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಬಹುದು. ಬಾಲಕರನ್ನು ನೇಮಿಸಿಕೊಳ್ಳುವುದು ಎಷ್ಟು ತಪ್ಪೋ ದುಡಿಮೆಗೆ ದೂಡುವುದು ಕೂಡ ಅಷ್ಟೇ ಅಪರಾಧ. ನೇಮಕ ಮಾಡಿಕೊಳ್ಳುವ ಮಾಲೀಕರು ಹಾಗೂ ಅದಕ್ಕೆ ಅವಕಾಶ ಕೊಡುವ ಪೋಷಕರೂ ಸಹ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದರು.
ಬಾಲ ಕಾರ್ಮಿಕ ಪದ್ಧತಿಗೆ ಬಡತನ, ಅನಕ್ಷರತೆ, ಮೂಢನಂಬಿಕೆ ಇನ್ನಿತರೆ ಏನೇ ಕಾರಣಗಳಿರಬಹದು. ಅವೆಲ್ಲವನ್ನೂ ಮೀರಿ ನಾವು ನೀವೆಲ್ಲರೂ ಸೇರಿ ಈ ಅನಿಷ್ಟ ಪದ್ಧತಿಯನ್ನು ನಿರ್ನಾಮ ಮಾಡಲು ಮುಂದಾಗಬೇಕಿದೆ. ಈ ಪದ್ಧತಿಯನ್ನು ಕೇವಲ ಕಾನೂನಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಸಮಾಜದ ಎಲ್ಲರೂ ಕೈಜೋಡಿಸಿ ಅನಿಷ್ಟ ಪದ್ಧತಿಗೆ ತಿಲಾಂಜಲಿ ಇಡಬೇಕಿದೆ. ಈ ದೇಶದ ಭವಿಷ್ಯದ ಪ್ರಜೆಗಳನ್ನು ಉತ್ತಮವಾಗಿ ರೂಪಿಸಲು ಎಲ್ಲರೂ ಮುಂದಾಗಬೇಕಿದೆ ಎಂದು ಹೇಳಿದರು.
ಜೆಎಂಎಫ್ಸಿ ಮತ್ತು ಸಿವಿಲ್ ನ್ಯಾಯಾಧೀಶರಾದ ಟಿ.ಎಲ್.ಸಂದೀಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಸರ್ಕಾರಿ ವಕೀಲೆ ಎಸ್.ಕುಮುದಿನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಲಕ್ಷ್ಮೀದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಬಾಬು, ಕಾರ್ಮಿಕ ನಿರೀಕ್ಷಕ ಎಸ್.ವಿಶ್ವನಾಥ್, ಮುಖ್ಯ ಶಿಕ್ಷಕ ರವೀಂದ್ರ, ಶಿಕ್ಷಕರಾದ ಮಂಜುಳಾ, ಇಂದಿರಾ, ಕಮಲಮ್ಮ, ಸಯಿದಾ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







