Home News ಶಾಂತ ಮತದಾನ, ಅಲ್ಲಲ್ಲಿ ಅಹಿತಕರ ಘಟನೆ

ಶಾಂತ ಮತದಾನ, ಅಲ್ಲಲ್ಲಿ ಅಹಿತಕರ ಘಟನೆ

0

ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದ ಐದು ಜಿಲ್ಲಾ ಪಂಚಾಯತಿ ಹಾಗು ೧೭ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಶನಿವಾರ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಶಾಂತವಾಗಿತ್ತು.

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದ ಮತಗಟ್ಟೆಯಲ್ಲಿ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ದಂಪತಿ ತಮ್ಮ ಮತ ಚಲಾಯಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದ ಮತಗಟ್ಟೆಯಲ್ಲಿ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ದಂಪತಿ ತಮ್ಮ ಮತ ಚಲಾಯಿಸಿದರು.

ಚುನಾವಣೆಯ ಹಿನ್ನಲೆಯಲ್ಲಿ ಗ್ರಾಮಾಂತರ ಪ್ರದೇಶಗಳಿಂದ ಜನರು ನಗರಕ್ಕೆ ಬಾರದೇ ಇದ್ದುದರಿಂದ ನಗರದ ಮುಖ್ಯರಸ್ತೆಗಳಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಠಿಯಾಗಿತ್ತು.
ಬೆಳಿಗ್ಗೆ ಏಳು ಗಂಟೆಗೆ ಪ್ರಾರಂಭವಾದ ಚುನಾವಣೆಯಲ್ಲಿ ಮತಚಲಾಯಿಸಲು ಕೆಲವೆಡೆ ಜನರು ಬೆಳಿಗ್ಗೆಯೇ ಉತ್ಸಾಹ ಭರಿತರಾಗಿ ಬೇಗ ಬಂದು ಸರತಿಸಾಲುಗಳಲ್ಲಿ ನಿಂತು ಮತದಾನ ಮಾಡಿದರೆ, ಕೆಲವೆಡೆ ಮಧ್ಯಾಹ್ನದ ವರೆಗೂ ಜನರು ಬರುವುದು ಕಡಿಮೆಯಾಗಿತ್ತು.
ಶಾಸಕ ಎಂ.ರಾಜಣ್ಣ ತಮ್ಮ ಸ್ವಗ್ರಾಮ ಎಲ್.ಮುತ್ತುಗದಹಳ್ಳಿಯಲ್ಲಿ ಮತಚಲಾಯಿಸಿದರೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಮ್ಮ ಸ್ವಗ್ರಾಮ ಹಂಡಿಗನಾಳ ಗ್ರಾಮದಲ್ಲಿ ಮತಚಲಾಯಿಸಿದರು.
ಕಲ್ಲುತೂರಾಟ: ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶನಿವಾರ ನಡೆದ ಜಿಲ್ಲಾ ಪಂಚಾಯಿತಿ ಹಾಗು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ.
ಶಿಡ್ಲಘಟ್ಟ ತಾಲ್ಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ಕಾರ್ಯಕರ್ತರ ನಡುವೆ ಕಲ್ಲುತೂರಾಟ ನಡೆದಿದ್ದು ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟ ನಡೆದಿದ್ದು ಪೊಲೀಸರು ಮಧ್ಯಪ್ರವೇಶಿಸಿ ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ ನಂತರ ಮತದಾನ ಪ್ರಕ್ರಿಯೆ ಮತ್ತೆ ಶುರುವಾಯಿತು.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಎನ್.ಚೈತ್ರಾ, ಚುನಾವಣಾಧಿಕಾರಿ ಹಾಗು ತಹಸೀಲ್ದಾರ್ ಕೆ.ಎಂ.ಮನೋರಮಾ, ಜಾಗೃತದಳದ ಮುಖ್ಯಸ್ಥ ಹೆಚ್.ಎ.ಹರೀಶ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲ್ಲುತೂರಾಟದಲ್ಲಿ ಗ್ರಾಮಸ್ಥರಾದ ಕರಗಪ್ಪ, ಬೈರೇಗೌಡ, ಭಾಗ್ಯಮ್ಮ, ರಾಮಣ್ಣ, ಲಕ್ಷ್ಮಿದೇವಮ್ಮ, ಸುಶೀಲಮ್ಮ, ನಾರಾಯಣಪ್ಪ ಮತ್ತಿತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಉಳಿದಂತೆ ತಾಲ್ಲೂಕಿನ ಅಪ್ಪೇಗೌಡನಹಳ್ಳಿ, ಸೊಣ್ಣೇನಹಳ್ಳಿ, ಆನೇಮಡುಗು ಮತ್ತಿತರ ಗ್ರಾಮಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತಾದರೂ ಯಾವುದೇ ಅಹಿತಕರ ಘಟನೆಯಾಗಿಲ್ಲ.

error: Content is protected !!