Home News ಶಿಡ್ಲಘಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ

ಶಿಡ್ಲಘಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ

0

Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಠಮಿ (Krishna Janmashtami) ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಅವರು ಯಾದವ ಸಮುದಾಯದವರಿಗೆ ಸಮುದಾಯ ಭವನಕ್ಕೆ ಹನುಮಂತಪುರ ಗೇಟ್ ಬಳಿ ಸ್ಥಳವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಸ್ಥಳ ಮಂಜೂರು ಮಾಡಲು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Sidlaghatta Krishna Janmashtami

ಸುಖ ಸಂತೋಷ ಇಲ್ಲದ ಮೇಲೆ ಜೀವನಕ್ಕೆ ಅರ್ಥವಿರುವುದಿಲ್ಲ. ನಿಜವಾದ ಸಂತೋಷ ಸುಖ ನೆಮ್ಮದಿ ಕಾಣಬೇಕಾದರೆ ಭಗವಂತನನ್ನು ಅರಿಯಬೇಕು. ಅವನಲ್ಲಿ ಶರಣಾಗಬೇಕು. ಶ್ರೀಕೃಷ್ಣನ ಸಂದೇಶ ಪಾಲನೆ ಮಾಡಬೇಕು ಎಂದು ಹೇಳಿದರು.

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ಶುಕ್ರವಾರ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.

ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.

ತಾಲ್ಲೂಕಿನ ಯಾದವ ಕುಲಸ್ಥರಿಂದ ಕೃಷ್ಣಸ್ವಾಮಿ ದೇವಸ್ಥಾನದಿಂದ ಪಲ್ಲಕ್ಕಿಯ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ದೇವರುಗಳ ಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.

ನಗರದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಉಯ್ಯಾಲೆಯಲ್ಲಿ ಬಾಲಕೃಷ್ಣ ಮೂರ್ತಿಯನ್ನಿರಿಸಿ ವಿವಿಧ ತಿಂಡಿಗಳನ್ನು ಕಟ್ಟಿ ತೂಗಿದರು.

ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಲ್ಲಕ್ಕಿಗಳ ತಂಡದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ಆರೋಗ್ಯ ಸಚಿವ ಡಾ.ಸುಧಾಕರ್, ಮಾಜಿ ಶಾಸಕ ಎಂ.ರಾಜಣ್ಣ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ಸುಬ್ರಮಣಿ, ಎ.ನಾಗರಾಜ್, ನಗರಸಭಾ ಸದಸ್ಯರಾದ ಬಿ.ಎಂ.ಮುನಿರಾಜು, ಎನ್.ಲಕ್ಷ್ಮಣ, ನವೀನ್, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಕೆ.ಕೇಶವಮೂರ್ತಿ, ಗೌರವಾಧ್ಯಕ್ಷ ಟಿ.ಕೆ.ನಟರಾಜ್, ವೈ.ರಾಮಕೃಷ್ಣಪ್ಪ, ವೆಂಕಟೇಶ್, ಬ್ರಹ್ಮಾನಂದರೆಡ್ಡಿ, ಜಿ.ರಾಮಚಂದ್ರಪ್ಪ, ಕೆ.ಕೃಷ್ಣಪ್ಪ, ದೊಡ್ಡಪಾಪಣ್ಣ, ನಗರಸಭಾ ಸದಸ್ಯರಾದ ಎನ್.ಲಕ್ಷ್ಮಣ, ಎಸ್.ಎ.ನಾರಾಯಣಸ್ವಾಮಿ,ವೆಂಕಟೇಶ್, ಮುರಳಿ, ಚಂದ್ರಶೇಖರ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version