ಗ್ರಾಮೀಣ ಭಾಗದ ಜನರ ಆರೋಗ್ಯ ದೃಷ್ಟಿಯಿಂದ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಎಲ್.ಮುತ್ತುಗದಹಳ್ಳಿ ಗ್ರಾಮದಲ್ಲಿ ೧೨ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಭಾನುವಾರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದ ಬಹುತೇಕ ಜನ ವಿವಿಧ ಖಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ತಾಲ್ಲೂಕಿನ ಎಂಟು ಗ್ರಾಮಗಳಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕಗಳು ಉದ್ಘಾಟನೆಗೆ ಸಿದ್ದವಾಗಿವೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕ ಸಾರ್ವಜನಿಕರ ಸ್ವತ್ತಾಗಿದ್ದು, ಇದರ ನಿರ್ವಹಣೆ ಸೇರಿದಂತೆ ಘಟಕದ ಸುತ್ತಲೂ ನೈರ್ಮಲ್ಯ ಕಾಪಾಡಲು ಗ್ರಾಮಸ್ಥರು ಸಹಕರಿಸಬೇಕು. ಪ್ರತಿಯೊಬ್ಬರೂ ಶುದ್ಧ ನೀರಿನ ಸೇವನೆ ಮಾಡುವುದರಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಸೂಚಿಸಿದರು.
ತಾಲ್ಲೂಕಿನ ಪೈಯಲಹಳ್ಳಿ, ಹರಳಹಳ್ಳಿ ಹಾಗೂ ತಾತಹಳ್ಳಿ ಗ್ರಾಮದಲ್ಲಿ ಎಸ್ಸಿಪಿ ಹಾಗು ಟಿಎಸ್ಪಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನೂ ಭಾನುವಾರ ನೆರವೇರಿಸಿದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯತಿ ಸದಸ್ಯ ಕೆ.ಲಕ್ಷ್ಮಿನಾರಾಯಣರೆಡ್ಡಿ, ಮುಖಂಡರಾದ ಕೆ.ಬಿ.ಮಂಜುನಾಥ, ಆಂಜಿನಪ್ಪ, ಕರಗಪ್ಪ, ರಂಗಪ್ಪ, ಸುಬ್ಬಣ್ಣ, ಆನಂದ್, ಪುನೀತ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.