ಸಮುದಾಯದ ಹಿರಿಯರೆಲ್ಲ ಸೇರಿ ವಿಶಾಲವಾದ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಸಿದ್ಧತೆ ನಡೆಸಿದ್ದರೆ, ಕಿರಿಯರೆಲ್ಲರೂ ಹೊಸ ಉಡುಪುಗಳನ್ನು ತೊಟ್ಟು ಸಿಹಿ ತಿನ್ನುವ ಉಮೇದಿಯಲ್ಲಿದ್ದರು. ಒಂದು ತಿಂಗಳ ಕಾಲ ಕೈಗೊಂಡ ರೋಜಾ (ಉಪವಾಸ ಆಚರಣೆ) ಕೊನೆಗೊಳಿಸಿ ಸೋಮವಾರ ರಂಜಾನ್ ಹಬ್ಬ ಆಚರಿಸುವ ಸಂಭ್ರಮದಲ್ಲಿದ್ದರು. ಇದಕ್ಕೆಂದೇ ಮನೆಗಳಲ್ಲಿ, ಮಸೀದಿಗಳಲ್ಲಿ ಮತ್ತು ಹೊರಾವರಣದಲ್ಲಿ ಹೊಸ ಬಗೆಯ ಕಳೆ ಮೂಡಿತ್ತು.
ಶ್ರದ್ಧಾಭಕ್ತಿಯ ಸಂಕೇತವಾದ ರಂಜಾನ್ ಹಬ್ಬವನ್ನು ಸಹಸ್ರಾರು ಮುಸ್ಲಿಂ ಬಾಂಧವರು ಸೋಮವಾರ ಸಂಭ್ರಮದಿಂದ ತಾಲ್ಲೂಕಿನಾದ್ಯಂತ ಆಚರಿಸಿದರು.
ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ನಿಧನ ಹೊಂದಿರುವ ಪೂರ್ವಜರ ಸಮಾಧಿಗಳ ಬಳಿ ಪ್ರಾರ್ಥನೆ ಸಲ್ಲಿಸಿದರು.
ಬಡವರಿಗೆ ದಾನ: ರಂಜಾನ್ ಹಬ್ಬಕ್ಕೂ ಒಂದು ತಿಂಗಳು ಮುನ್ನ ಅವರು ಕೈಗೊಳ್ಳುವ ರೋಜಾ ಆಚರಣೆಯಲ್ಲಿ ಹಿರಿಯರು ಮತ್ತು ಕಿರಿಯರು ಬೇಧವಿಲ್ಲದೆ ಪಾಲ್ಗೊಂಡಿದ್ದರು. ಪವಿತ್ರ ರಂಜಾನ್ ಮಾಸವನ್ನು ಧಾರ್ಮಿಕ ತಿಂಗಳು. ಉಪವಾಸದ ತಿಂಗಳೆಂದೇ ಕರೆಯುತ್ತಾರೆ. ತಿಂಗಳು ಪೂರ್ತಿ ಕುರ್ಆನ್ ಪಠಿಸುತ್ತಾರೆ. ಎಲ್ಲರ ಸುಖ-ಸಂತೋಷ- ನೆಮ್ಮದಿಗಾಗಿ ಅಲ್ಲಾಹುವಿನಲ್ಲಿ ಬಿನ್ನವಿಸಿಕೊಳ್ಳುತ್ತಾರೆ. ಬಡವರಿಗೆ ಮತ್ತು ಸಂಕಷ್ಟದಲ್ಲಿದ್ದವರಿಗೆ ನೆರವು ನೀಡುತ್ತಾರೆ. ದಾನ ಮಾಡುತ್ತಾರೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಪೂರ್ವಜರ ಸಮಾಧಿಗಳಿಗೆ ಪೂಜೆ ಸಲ್ಲಿಸಿದ ನಂತರ ಜಾತಿ ಬೇಧವಿಲ್ಲದೆ ಬಡವರಿಗೆ ದಾನ ನೀಡಿದರು.
‘ಪವಿತ್ರ ಗ್ರಂಥ ಕುರಾನ್ ರಚನೆ ಆರಂಭಗೊಂಡಿದ್ದು ರಂಜಾನ್ ತಿಂಗಳಿನಲ್ಲಿ. ರಂಜಾನ್ ತಿಂಗಳಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆಯಿದೆ. ತಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಬಡವರಿಗೆ ದಾನ ಮಾಡುವ ಉದಾತ್ತ ಹಬ್ಬವಿದು. ಸಮಾಜದಲ್ಲಿ ಸೌಹಾರ್ಧತೆಗೆ ಪ್ರತೀಕವಾದ ಈ ಹಬ್ಬ ಐಕ್ಯತೆ ಹಾಗೂ ಅಭಿವೃದ್ಧಿಗೆ ಪೂರಕವಾಗಲಿ’ ಎಂದು ಶಾಸಕ ಎಂ.ರಾಜಣ್ಣ ಈದ್ಗಾ ಮೈದಾನದಲ್ಲಿ ಮುಸ್ಲೀಂ ಬಾಂಧವರಿಗೆ ಶುಭಾಶಯ ತಿಳಿಸಿದ ಸಂದರ್ಭದಲ್ಲಿ ತಿಳಿಸಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಧರ್ಮಗುರುಗಳು ಬೋಧನೆ ಮಾಡಿದರು. ನಗರಸಭಾ ಸದಸ್ಯ ನಂದಕಿಶನ್, ಸುರೇಶ್, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಈದ್ಗಾ ಮೈದಾನದಲ್ಲಿ ಶುಭಾಶಯ ಕೋರಿದರು.