Home News ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

0

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.
ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.
ತಾಲ್ಲೂಕಿನ ಯಾದವ ಕುಲಸ್ಥರಿಂದ ಕೃಷ್ಣಸ್ವಾಮಿ ದೇವಸ್ಥಾನದಿಂದ ಕುದುರೆ ರಥ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ನವಿಲುಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.
ಪಟ್ಟಣದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಉಯ್ಯಾಲೆಯಲ್ಲಿ ಬಾಲಕೃಷ್ಣ ಮೂರ್ತಿಯನ್ನಿರಿಸಿ ವಿವಿಧ ತಿಂಡಿಗಳನ್ನು ಕಟ್ಟಿ ತೂಗಿದರು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಲ್ಲಕ್ಕಿಗಳ ತಂಡದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ಸಂಸದ ಎಸ್.ಮುನಿಸ್ವಾಮಿ, ಶಾಸಕ ವಿ.ಮುನಿಯಪ್ಪ, ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್, ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಕೆ.ಕೇಶವಮೂರ್ತಿ, ಗೌರವಾಧ್ಯಕ್ಷ ಟಿ.ಕೆ.ನಟರಾಜ್, ವೈ.ರಾಮಕೃಷ್ಣಪ್ಪ, ಡಿ.ವಿ.ವೆಂಕಟೇಶ್, ಬ್ರಹ್ಮಾನಂದರೆಡ್ಡಿ, ಜಿ.ರಾಮಚಂದ್ರಪ್ಪ, ಕೆ.ಕೃಷ್ಣಪ್ಪ, ದೊಡ್ಡಪಾಪಣ್ಣ, ನಗರಸಭಾ ಸದಸ್ಯರಾದ ಎನ್.ಲಕ್ಷ್ಮಣ, ಎಸ್.ಎ.ನಾರಾಯಣಸ್ವಾಮಿ, ಮುನಿರಾಜು ಹಾಜರಿದ್ದರು.

error: Content is protected !!