Home News ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ

ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ

0

ನಗರದ ತಾಲ್ಲೂಕು ಕಚೇರಿ ಪಕ್ಕದಲ್ಲಿರುವ ಕಂದಾಯ ಭವನದ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀ ಮಡಿವಾಳ ಮಾಚಿದೇವರ ಎರಡನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಹಿಂದುಳಿದ ಹಾಗೂ ಶ್ರಮಜೀವಿ ವರ್ಗದ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವ ಪ್ರಮುಖರು. ಮೇಲು ಕೀಳು, ಬಡವರು, ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೆ ಒಳಗಾದವರ ಬಗ್ಗೆ ಚಿಂತಿಸಿ ವ್ಯಕ್ತಿ ವ್ಯಕ್ತಿಗಳ ಬಗ್ಗೆ ಇರುವ ಅಂತರವನ್ನು ಹೋಗಲಾಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದರು ಎಂದು ಅವರು ತಿಳಿಸಿದರು.
ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ, ಜನರಲ್ಲಿ ಭಕ್ತಿಪ್ರಧಾನ ಚಿಂತನೆಗಳನ್ನು ತುಂಬಿಸಿದ ಅವರು ಮೂರು ಲಕ್ಷ ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಶರಣರ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡು ಸಮಾಜದ ತಳಮಟ್ಟದ ಜನರನ್ನು ಮೇಲೆತ್ತುವ ಕಾಯಕಕ್ಕಾಗಿ ಅಹಿಂಸೆ ತತ್ವವನ್ನು ಅಳವಡಿಸಿಕೊಂಡ ಅವರ ವಿಶಾಲ ಮನೋಭಾವ ಸರ್ವರಿಗೂ ಮಾದರಿ. ಕಲ್ಯಾಣದ ಕ್ರಾಂತಿಯ ಸಂದರ್ಭದಲ್ಲಿ ಶರಣರ ವಚನಸಾಹಿತ್ಯವನ್ನು ನಾಶಪಡಿಸುವ ಪ್ರಯತ್ನ ತಡೆದ ಮಾಚಿದೇವ ವಚನಸಾಹಿತ್ಯವನ್ನು ಬೆನ್ನ ಮೇಲೆ, ತಲೆಯ ಮೇಲೆಯೇ ಹೊತ್ತು ಹೋರಾಡಿದರು. ಶರಣರ ವಚನಸಾಹಿತ್ಯದ ರಕ್ಷಣೆಗಾಗಿ ಹೋರಾಡಿದ ಮಾಚಿದೇವರ ಜಯಂತಿಯನ್ನು ಎಲ್ಲೆಡೆ ಶ್ರದ್ಧೆಯಿಂದ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
ತಹಸೀಲ್ದಾರ್ ಅಜಿತ್‌ಕುಮಾರ್ ರೈ ಮಾತನಾಡಿ, ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ- ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ‘ಮಡಿವಾಳ ಮಾಚಿದೇವ’ ಪ್ರಮುಖರು ಎಂದರು.
ಮುಖ್ಯ ಭಾಷಣಕಾರ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಂ.ದೇವರಾಜ್ ಮಾತನಾಡಿ, ಶರಣರ ಬಟ್ಟೆಗಳನ್ನು ಶುಚಿ ಮಾಡುವುದು ಮಾಚಿದೇವರ ಕಾಯಕ. ವೀರನಿಷ್ಠೆಯ ಶರಣನೀತ. ವಿಜಾಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ದೇವರ ಹಿಪ್ಪರಗಿಯಲ್ಲಿ ಪರುವತಯ್ಯ –ಸುಜ್ಞಾನವ್ವ ದಂಪತಿಗಳ ಪುತ್ರ. ಇವರ ಕಾರ್ಯಕ್ಷೇತ್ರ ಕಲ್ಯಾಣ. ಆರಾಧ್ಯದೈವ ಕಲ್ಲಿನಾಥ. ಕಾವ್ಯ ಪುರಾಣಗಳಲ್ಲಿ ಇವರನ್ನು ವೀರಭದ್ರನ ಅವತಾರವೆಂದು ಬಣ್ಣಿಸಲಾಗಿದೆ. ಶಾಸನ ಶಿಲ್ಪಗಳಲ್ಲಿಯೂ ಇವರ ಕುರಿತಾಗಿ ಮಾಹಿತಿಯಿದೆ. ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು ಎಂದು ಮಾಚಿದೇವರ ಜೀವನದ ಘಟನೆಗಳನ್ನು, ವಚನಸಾಹಿತ್ಯವನ್ನು ವಿವರಿಸಿದರು.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆಗೆ ಮಡಿವಾಳ ಮಾಚಿದೇವ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಚಾಲನೆ ನೀಡಿದರು
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆಗೆ ಮಡಿವಾಳ ಮಾಚಿದೇವ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಗಾರುಡಿಗೊಂಬೆಗಳು, ವೀರಗಾಸೆ, ತಮಟೆ ತಂಡ, ಕಳಶ ಹೊತ್ತ ಮಹಿಳೆಯರು ಭಾಗವಹಿಸಿದ್ದರು. ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೂ ಮೆರವಣಿಗೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಮುದಾಯದ ಹಿರಿಯ ಮುಖಂಡರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ರಾಜ್ಯ ಮಡಿವಾಳ ಸಂಘದ ಉಪಾಧ್ಯಕ್ಷ ಆರ್.ವಿ.ರಾಜಣ್ಣ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ, ಪೌರಾಯುಕ್ತ ಜಿ.ಎನ್.ಚಲಪತಿ, ಮಡಿವಾಳ ಯುವಕ ಸಂಘದ ಅಧ್ಯಕ್ಷ ಎನ್.ರಾಜು, ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎನ್.ಎನ್.ಮುರಳೀಧರ, ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಓಬಣ್ಣ, ಎಸ್.ಎಂ.ಕೃಷ್ಣಪ್ಪ, ಶ್ರೀನಿವಾಸ್, ಚಿಕ್ಕಮುನಿಯಪ್ಪ ಹಾಜರಿದ್ದರು.

error: Content is protected !!