ನಗರದ ತಾಲೂಕು ಕಚೇರಿ ಪಕ್ಕದಲ್ಲಿರುವ ಕಂದಾಯ ಭವನದ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀ ಸವಿತಾ ಮಹರ್ಷಿಯ ಪ್ರಥಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಸದ್ಗುರು ಶ್ರೀ ಸವಿತಾ ಮಹರ್ಷಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸೇವೆ ಮಾಡುವ ಅವಕಾಶ ಸಿಗುತ್ತದೆ. ತಾವು ಮಾಡುವ ಸೇವೆಯಿಂದ ಆತ್ಮತೃಪ್ತಿ ಪಡೆಯಬೇಕು ಎಂದು ಅವರು ಹೇಳಿದರು.
ಪ್ರತಿಯೊಬ್ಬರೂ ತಮ್ಮನ್ನು ತಾವು ಧಾರ್ಮಿಕವಾಗಿ ತಿದ್ದಿಕೊಳ್ಳುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸೇರಿ ಧಾರ್ಮಿಕ ಚಿಂತನೆಗಳನ್ನು ರೂಡಿಸಿಕೊಳ್ಳಬೇಕು ಎಂದರು.
ತಹಸೀಲ್ದಾರ್ ಎಸ್ ಅಜಿತ್ಕುಮಾರ್ ರೈ ಮಾತನಾಡಿ, ಪ್ರತಿಯೊಂದು ಸಮುದಾಯವೂ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎನ್ನುವ ಉದ್ದೇಶದಿಂದ ಜಯಂತಿಗಳನ್ನು ಆಚರಿಸಲಾಗುತ್ತಿದ್ದು ಮುಂದಿನ ಪೀಳಿಗೆಗೆ ಜಯಂತಿಗಳು ದಾರಿದೀಪಗಳಾಗಬೇಕು ಎಂದರು.
ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯ ಡಾ.ಎಚ್.ಆರ್.ಲಕ್ಷ್ಮಿನಾರಾಯಣ ಹಾಗೂ ರೂಪಸಿರಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೂ ಹಮ್ಮಿಕೊಂಡಿದ್ದ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆಯಲ್ಲಿ ಸಮುದಾಯದ ಸುಮಾರು ೧೦೦ ಕ್ಕೂ ಹೆಚ್ಚು ಕಲಾವಿದರು ನಾದಸ್ವರ ನುಡಿಸುತ್ತಾ ಸಾಗಿದ್ದು ನೋಡುಗರ ಮನಸೆಳೆಯುವಂತಿತ್ತು. ಡೊಳ್ಳುಕುಣಿತದ ತಂಡವೂ ಜೊತೆಗೂಡಿತ್ತು.
ನಗರಸಭೆ ಅಧ್ಯಕ್ಷ ಅಫ್ಸರ್ಪಾಷ, ಪೌರಾಯುಕ್ತ ಚಲಪತಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ಎಚ್.ನಾರಾಯಣಸ್ವಾಮಿ, ಕಾರ್ಯದರ್ಶಿ ಬೆಳ್ಳೂಟಿ ರಮೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಬೆಳ್ಳೂಟಿ ಸಂತೋಷ್ ಹಾಜರಿದ್ದರು.
- Advertisement -
- Advertisement -
- Advertisement -







