ಸರ್ಕಾರಿ ಶಾಲೆಗಳಲ್ಲಿ ಕರಾಟೆಯನ್ನು ಕಲಿಸಲು ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಕರಾಟೆ ಶಿಕ್ಷಕ ಸಲೀಂ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಕರಾಟೆ ವಿಭಾಗಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕರಾಟೆ ಸ್ಪರ್ಧೆಗೆ 60 ಮಂದಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಅವರಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಕೇವಲ 16 ಮಾತ್ರ. ಈ ಸಂಖ್ಯೆ ಹೆಚ್ಚಬೇಕು. ಸರ್ಕಾರಿ ಶಾಲೆಯ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಯ ಈ ಕರಾಟೆ ಶಿಕ್ಷಣ ಕಲಿಸುವುದು ಅಗತ್ಯ ಎಂದು ಹೇಳಿದರು.
ಕರಾಟೆಯು ಕೇವಲ ಹೊಡೆದಾಟವಲ್ಲ. ದೇಹ ಮತ್ತು ಮನಸ್ಸನ್ನು ಸ್ಥಿಮಿತದಲ್ಲಿರಿಸಿಕೊಳ್ಳುವುದು, ಆತ್ಮ ರಕ್ಷಣೆ ಮಾಡಿಕೊಳ್ಳುವುದು ಇದರ ಮೂಲ ಉದ್ದೇಶ ಎಂದು ತಿಳಿಸಿದರು.
ಕರಾಟೆ ಶಿಕ್ಷಕರಾದ ಶ್ರೀನಿವಾಸ್, ನೂರುಲ್ಲ, ಇನಾಯತ್ತುಲ್ಲ, ಅರುಣ್, ಮಹಮ್ಮದ್ ಹಾಜರಿದ್ದರು.