ಆಂಗ್ಲಮಾಧ್ಯಮದ ವ್ಯಾಮೋಹದಿಂದಾಗಿ ಬಡವರೂ ಕೂಡಾ ದುಬಾರಿ ಹಣವನ್ನು ಪಾವತಿಸಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿರುವುದು ದುರದೃಷ್ಟಕರ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಎರಡನೇ ಟಿ.ಎಂ.ಸಿ. ಲೇ ಔಟ್ನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಶೂಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಸರ್ಕಾರ ಸಾಮಾನ್ಯವರ್ಗದ ಮಕ್ಕಳಿಗೂ ಕೂಡಾ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಉಚಿತ ಪಠ್ಯಪುಸ್ತಕಗಳ ವಿತರಣೆ, ಸಮವಸ್ತ್ರಗಳ ವಿತರಣೆ, ಕ್ಷೀರಭಾಗ್ಯ ಯೋಜನೆ, ಸೈಕಲ್ ವಿತರಣೆ, ವಿದ್ಯಾರ್ಥಿವೇತನ ಸೇರಿದಂತೆ ಹೆಚ್ಚಿನ ವ್ಯಾಸಂಗಕ್ಕಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತಿದೆ. ಇತ್ತಿಚೆಗೆ ಎಲ್ಲಾ ಮಕ್ಕಳಲ್ಲಿ ಸಮಾನತೆ ಕಾಪಾಡಲು ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶೂಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಯಾವುದೇ ಮಗುವಿನಲ್ಲಿ ಬೌದ್ಧಿಕವಾಗಿ ಕಲಿಕೆಯ ಮಟ್ಟವನ್ನು ಹೆಚ್ಚಿಸದಿದ್ದರೆ, ಅಂತಹ ಮಕ್ಕಳು ಸಮಾಜದಲ್ಲಿ ಉತ್ತಮವಾದ ಸ್ಥಾನಗಳನ್ನು ಗಳಿಸಿಕೊಳ್ಳುವಲ್ಲಿ ವಿಫಲರಾಗುತ್ತಾರೆ ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಮಕ್ಕಳು ಪ್ರಾಥಮಿಕ ಹಂತದಿಂದಲೇ ನಿರ್ಧಿಷ್ಟವಾದ ಗುರಿಯನ್ನು ಹೊಂದಿರಬೇಕು. ನಿರಂತರವಾದ ಪರಿಶ್ರಮ, ಆಸಕ್ತಿಯಿಂದ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಸಮಯಪಾಲನೆ ಬಹಳ ಮುಖ್ಯವಾಗುತ್ತದೆ, ಮಕ್ಕಳ ಬಗ್ಗೆ ಪೋಷಕರೂ ಕೂಡಾ ಹೆಚ್ಚಿನ ಕಾಳಜಿವಹಿಸಬೇಕು. ಶಿಸ್ತು, ಸಂಯಮಗಳನ್ನು ಪ್ರಾಥಮಿಕ ಹಂತದಿಂದಲೇ ಬೆಳೆಸಬೇಕು. ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು. ಶಿಕ್ಷಕರೂ ಕೂಡಾ ಸರ್ಕಾರದಿಂದ ಮಕ್ಕಳಿಗೆ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ತಲುಪಿಸಿ, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸೇರಿಸುವಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ನಗರಸಭಾ ಸದಸ್ಯರಾದ ಇಲಿಯಾಜ್ಬೇಗ್, ಅಪ್ಸರ್ಪಾಷಾ, ಮುಖಂಡರಾದ ರಘು, ಲಕ್ಷೀನಾರಾಯಣ, ಕನಕಪ್ರಸಾದ್, ಶ್ರೀಧರ್, ಸೂರ್ಯನಾರಾಯಣಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -







