ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕಾದರೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಹೊಸಪೇಟೆ ಗ್ರಾಮದಿಂದ ತಮಿಳುನಾಡಿನ ಮೇಲ್ಮರುವತ್ತೂರಿನ ಆದಿಪರಾಶಕ್ತಿ ದೇವಾಲಯಕ್ಕೆ ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಜನ್ಮದಿನದ ಅಂಗವಾಗಿ ೮ ಬಸ್ಗಳಲ್ಲಿ ೪೪೦ ಮಂದಿಗೆ ಆಯೋಜಿಸಿದ್ದ ಯಾತ್ರೆಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಆದಿಪರಾಶಕ್ತಿಯ ಸನ್ನಿಧಿಗೆ ತೆರಳುತ್ತಿರುವ ಭಕ್ತರು ನಮ್ಮ ಭಾಗದಲ್ಲಿ ಉತ್ತಮವಾಗಿ ಮಳೆ ಬೆಳೆಗಳಾಗಲಿ ಎಂದು ಪ್ರಾರ್ಥಿಸಲಿ. ನಾಡು ಸುಭಿಕ್ಷವಾಗಿದ್ದರೆ ಜನರೂ ಏಳಿಗೆ ಕಾಣುತ್ತಾರೆ. ಶ್ರದ್ಧಾಭಕ್ತಿಯಿಂದ ವ್ರತವನ್ನು ಆಚರಿಸಿ ಪೂಜಿಸುವ ಮನಸ್ಸುಗಳಿಗೆ ದೇವರು ಅನುಗ್ರಹಿಸುತ್ತಾರೆ. ಮುಂದಿನ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಯನ್ನು ಕುಮಾರಸ್ವಾಮಿಯವರು ಮುನ್ನಡೆಸಲು ದೇವರಲ್ಲಿ ಪ್ರಾರ್ಥನೆ ಮಾಡುವುದಾಗಿ ಅವರು ಹೇಳಿದರು.
ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿ, ಬಯಲುಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಲ್ಪಿಸಲೆಂದು ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಪಡೆದು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲೆಂದು ದೇವರ ಆಶೀರ್ವಾದಕ್ಕಾಗಿ ಜೆಡಿಎಸ್ ಕಾರ್ಯಕರ್ತರು ಓಂ ಶಕ್ತಿ ದೇವಾಲಯಕ್ಕೆ ಭಕ್ತರಿಗೆ ಯಾತ್ರೆಯನ್ನು ಆಯೋಜಿಸಿದ್ದಾರೆ. ಇತ್ತೀಚೆಗಷ್ಟೆ ನಡೆದ ಎಚ್.ಡಿ.ಕುಮಾರಸ್ವಾಮಿ ಮತ್ತು ರೇವಣ್ಣನವರ ಹುಟ್ಟಿದ ಹಬ್ಬದ ಪ್ರಯುಕ್ತ ಆದಿಪರಾಶಕ್ತಿಯ ದರ್ಶನಕ್ಕೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಸುಮಾರು ನಾಲ್ಕು ಸಾವಿರ ಮಂದಿಯನ್ನು ಹಂತಹಂತವಾಗಿ ಕಳುಹಿಸುತ್ತಿರುವುದಾಗಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಅದ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಘುನಾಥ್, ನಾಗಮಂಗಲ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸಗೌಡ, ಜಂಗಮಕೋಟೆ ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್, ಶ್ರೀನಿವಾಸ್, ಹೊಸಪೇಟೆ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಜೆಡಿಎಸ್ ಮುಖಂಡರಾದ ಮೇಲೂರು ಕೆ.ಎಸ್.ಮಂಜುನಾಥ್, ಸಿ.ವಿ. ನಾರಾಯಣಸ್ವಾಮಿ, ನಾರಾಯಣಸ್ವಾಮಿ, ಬೈರಪ್ಪ. ಮುನಿಕೃಷ್ಣ, ಮುಂತಾದವರು ಹಾಜರಿದ್ದರು.
- Advertisement -
- Advertisement -
- Advertisement -







