Appegowdanahalli, Sidlaghatta : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಧಾರ್ಮಿಕ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಧರೆ ಫೌಂಡೇಶನ್ ಸಹಕಾರದೊಂದಿಗೆ “ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ 5 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮ”ಕ್ಕೆ ಸೋಮವಾರ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ಆವರಣದಲ್ಲಿ ಚಾಲನೆ ನೀಡಲಾಯಿತು.
ಗಿಡನೆಟ್ಟು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಮಾತನಾಡಿ, ಮುಂಬರುವ ಜೂನ್ 5 ರ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಜಿಲ್ಲೆಯಾದ್ಯಂತ 5 ಲಕ್ಷ ಗಿಡಗಳನ್ನು ನೆಡುವ ಗುರಿಯನ್ನು ಹೊಂದಿದ್ದೇವೆ. ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರ ಕನಸಿದು. ಜಿಲ್ಲೆಯಲ್ಲಿ ಹಸಿರು ಪರಿಸರವನ್ನು ವೃದ್ಧಿಸುವ ಆಶಯಹೊಂದಿದ್ದಾರೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇಡೀ ರಾಜ್ಯಾದ್ಯಂತ 5 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಿದೆ. ಅದರ ಭಾಗವಾಗಿ ಮೊಟ್ಟಮೊದಲು ನಮ್ಮ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ದಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ಆವರಣದಲ್ಲಿ 400 ಗಿಡಗಳನ್ನು ನೆಡುತ್ತಿದ್ದೇವೆ” ಎಂದು ಹೇಳಿದರು.
ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಗಿಡಗಳನ್ನು ನೆಡುವುದರ ಜೊತೆಗೆ ಮೂರುವರ್ಷ ಅವುಗಳ ಪಾಲನೆ ಪೋಷಣೆ ಮಾಡಬೇಕು. ಹಾಗಾಗಿ ಮೊದಲನೇ ಹಂತದಲ್ಲಿ ಶಾಲೆಗಳ ಆವರಣ, ಗ್ರಾಮ ಪಂಚಾಯಿತಿಯ ಸ್ವಚ್ಛತಾ ಘಟಕಗಳು, ಸ್ಮಶಾನಗಳು, ಕೆರೆ ಅಂಚು, ದೇವಾಲಯಗಳ ಆವರಣ, ಹೀಗೆ ಎಲ್ಲೆಲ್ಲಿ ನೆಟ್ಟ ಗಿಡಗಳಿಗೆ ರಕ್ಷಣೆ, ಪೋಷಣೆ ಸಿಗುವುದೋ ಅಂತಹ ಸ್ಥಳಗಳನ್ನು ಆಯ್ಕೆ ಮಾಡಿದ್ದೇವೆ. ನ್ಯಾಯಾಂಗ ಇಲಾಖೆಯ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಗಿಡಗಳನ್ನು ನೆಡಲಾಗುತ್ತಿದೆ. ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಮೊದಲ ಮಳೆ ಬೀಳುತ್ತಿದ್ದಂತೆಯೇ ಸಮರೋಪಾದಿಯಲ್ಲಿ ಗಿಡ ನೆಡಲಾಗುವುದು. ಶೇ 80 ನೆಟ್ಟ ಗಿಡಗಳು ಬೆಳೆದು ದೊಡ್ಡವಾಗಬೇಕು ಎಂಬ ಸಂಕಲ್ಪದೊಂದಿಗೆ ಈ ವಿಶೇಷ ಅಭಿಯಾನವನ್ನು ನಡೆಸುತ್ತಿದ್ದೇವೆ” ಎಂದು ನುಡಿದರು.
ಜಿಲ್ಲಾ ಅರಣ್ಯಾಧಿಕಾರಿ ಗಿರೀಶ್, ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಯಾಧೀಶೆ ಸುಕನ್ಯಾ.ಸಿ.ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರಂಜಿತಾ.ಎಸ್., ತಹಶೀಲ್ದಾರ್ ಗಗನಸಿಂಧು, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲೆ ವಿಜಯಶ್ರೀ, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್ ಹಾಜರಿದ್ದರು.








