Home News 7ನೇ ವೇತನ ಆಯೋಗದ ಶಿಫಾರಸ್ಸು

7ನೇ ವೇತನ ಆಯೋಗದ ಶಿಫಾರಸ್ಸು

0

7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಎಲ್ಲಾ ರಾಜ್ಯಗಳಲ್ಲಿಯೂ ಕೂಡಲೇ ಜಾರಿಗೊಳಿಸಬೇಕು ಹಾಗು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಯಲ್ಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಕೋಟೆ ವೃತ್ತದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬಿಇಓ ಎಸ್. ರಘುನಾಥರೆಡ್ಡಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ ಸದಸ್ಯರು 7 ನೇ ವೇತನ ಆಯೋಗದ ಶಿಫಾರಸ್ಸನ್ನು ಕೂಡಲೇ ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಬೇಕು. ಹಾಗು ನೂತನ ಪಿಂಚಣಿ ಯೋಜನೆಯಿಂದ ಶಿಕ್ಷಕರ ಮತ್ತು ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ಜೀವನ ಅಂಧಕಾರದಲ್ಲಿ ಮುಳುಗುತ್ತದೆ. ಹಾಗಾಗಿ ನೂತನ ಪಿಂಚಣಿ ಯೋಜನೆಯನ್ನು ಕೈಬಿಟ್ಟು ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರೆಸುವುದು. ಪ್ರಾಥಮಿಕ ಶಿಕ್ಷಣದ ಅಭಿವೃದ್ದಿಗಾಗಿ ಪ್ರಾಥಮಿಕ ಶಿಕ್ಷಣ ಮಂಡಳಿ ಸ್ಥಾಪಿಸಬೇಕು, ರಾಜ್ಯದ ಎಲ್ಲ ಸರ್ಕಾರಿ ಸಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು. ಮತ್ತು ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನಿಷ್ಟ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ/ಶಿಕ್ಷಕಿ ಹಾಗು ಶಾಲೆಗೆ ಒಬ್ಬ ಮುಖ್ಯಶಿಕ್ಷಕರನ್ನು ನಿಯುಕ್ತಿಗೊಳಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನು ಬಿಇಓ ಎಸ್ ರಘುನಾಥರೆಡ್ಡಿರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ, ಕಾರ್ಯದರ್ಶಿ ಬಿ.ಆರ್.ನಾರಾಯಣಸ್ವಾಮಿ, ಜಿಲ್ಲಾ ಗೌರವಾಧ್ಯಕ್ಷ ಸಿ.ಎಂ.ಮುನಿರಾಜು, ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಪಿಳ್ಳಣ್ಣ, ಮಂಜುನಾಥ, ಮುನಿಯಪ್ಪ, ನರಸಿಂಹರಾಜು, ಸುದರ್ಶನ್, ಸಾಧಿಕ್‍ಪಾಷ, ದ್ರಾಕ್ಷಾಯಿಣಿ, ಲತಾ, ಸರಸ್ವತಮ್ಮ ಮತ್ತಿತರರು ಹಾಜರಿದ್ದರು.

error: Content is protected !!