ನಗರದ ನೆಹರೂ ಕ್ರೀಡಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 72ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿದರು.
ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಬ್ರಿಟೀಷರಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿರಬಹುದು. ಕೃಷಿಕ ವರ್ಗದ ಘನತೆ ಹೆಚ್ಚಿದಾಗ, ಸೈನಿಕರಿಗೆ ಸೂಕ್ತ ಗೌರವ ಸಿಕ್ಕಾಗ, ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ಸಿಕ್ಕಾಗ, ಪ್ರತಿಯೊಬ್ಬ ಪ್ರತಿಭಾವಂತರಿಗೆ ಸರಿಯಾದ ಅವಕಾಶ ಸಿಕ್ಕಿದಾಗ ಅದು ನಿಜವಾದ ಸ್ವಾತಂತ್ಯ. ಶಿಕ್ಷಣದಿಂದ ವಂಚಿತರಾಗಿರುವವರು ಬಹಳಷ್ಟು ಮಂದಿ ಇನ್ನೂ ನಮ್ಮ ದೇಶದಲ್ಲಿ ಇದ್ದಾರೆ. ಅಂಥವರಿಗೆ ಸೂಕ್ತ ಶಿಕ್ಷಣ ಮತ್ತು ಅವಕಾಶಗಳು ಸಿಗಬೇಕಾಗಿದೆ. ಪ್ರತಿಭಾವಂತರ ದೇಶ ಬಿಟ್ಟು ಹೋಗದ ವ್ಯವಸ್ಥೆಯನ್ನು ರೂಪಿಸಬೇಕಿದೆ. ವಿದ್ಯಾರ್ಥಿ ಜೀವನದಿಂದಲೇ ಭಾರತೀಯತೆಯನ್ನು ಮಕ್ಕಳ ಮನದಲ್ಲಿ ತುಂಬುವ ಕೆಲಸವಾಗಲಿ ಎಂದು ಹೇಳಿದರು.
ಸರ್ಕಾರ ರೈತರ ಪರವಾಗಿದೆ. 49 ಸಾವಿರ ಕೋಟಿ ರೂಗಳ ಬೃಹತ್ ಸಾಲ ಮನ್ನಾ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ಹಲವು ಮಹನಿಯರ ಬಲಿತ್ಯಾಗದಿಂದ ದೇಶ ಸ್ವಾತಂತ್ರ್ಯವಾಗಿದೆ. ಯುವಜನರು ದೇಶ ಕಟ್ಟುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಬೇಕು. ಜಾತಿ ಭೇದ ಮರೆತು ಭಾರತೀಯತೆಯನ್ನು ಮೆರೆಯಬೇಕು ಎಂದರು.
ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಪೊಲೀಸರಿಂದ ಪಥಸಂಚಲನೆ ಮತ್ತು ಧ್ವಜವಂದನೆಯನ್ನು ಸ್ವೀಕರಿಸಿದ ನಂತರ ಶಾಸಕ ವಿ.ಮುನಿಯಪ್ಪ ಮತ್ತು ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರಿಗೆ ತಂಡಗಳ ಪರಿಚಯವನ್ನು ಮಾಡಿಕೊಡಲಾಯಿತು.
2017–18ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮೇಲೂರು ಸರ್ಕಾರಿ ಪ್ರೌಢಶಾಲೆಯ ಎಂ.ಎನ್.ಪಲ್ಲವಿ, ಬಶೆಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆಯ ಜೆ.ವೈ.ಅಂಬರೀಷ, ಮಳಮಾಚನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಪಿ.ಶ್ರಾವಣಿ ಅವರಿಗೆ ಶಿಕ್ಷಣ ಇಲಾಖೆಯಿಂದ ಲ್ಯಾಪ್ಟಾಪ್ ನೀಡಲಾಯಿತು. ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಪೊಲೀಸ್, ದ್ವಿತೀಯ ಸ್ಥಾನ ಪಡೆದ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಮತ್ತು ತೃತೀಯ ಸ್ಥಾನ ಪಡೆದ ಕಂದಾಯ ಇಲಾಖೆಯವರಿಗೆ ಟ್ರೋಫಿ ನೀಡಲಾಯಿತು. ಸೈಕಲ್ ಟ್ಯಾಬಲೋ ರಚಿಸುವ ಉಲ್ಲೂರುಪೇಟೆ ಮಂಜುನಾಥ್ ಅವರಿಗೆ ಸೈಕಲ್ ನೀಡಲಾಯಿತು.
ನಗರದ ಕ್ರೆಸೆಂಟ್ ಶಾಲೆ, ಸರ್ಕಾರಿ ಪ್ರೌಢ ಶಾಲೆ ಮತ್ತು ಡಾಲ್ಫಿನ್ ಶಾಲೆಯ ವಿದ್ಯಾರ್ಥಿಗಳು ದೇಶ ಪ್ರೇಮವನ್ನು ಪ್ರದರ್ಶಿಸುವ ನೃತ್ಯ ರೂಪಕಗಳನ್ನು ನಡೆಸಿಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರರ, ಯೋಧರ, ಪ್ರಾಣಿ ಪಕ್ಷಿಗಳ ವೈವಿಧ್ಯಮಯ ವೇಷಭೂಷಣಗಳನ್ನು ಧರಿಸಿದ್ದ ಮಕ್ಕಳ ನೃತ್ಯ ರೂಪಕಗಳು ಜನರ ಮೆಚ್ಚುಗೆಗೆ ಪಾತ್ರವಾದವು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಸದಸ್ಯ ಸತೀಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಸದಸ್ಯರಾದ ದೀಪಾ ರಾಂಬಾಬು, ಪಂಕಜಾ ನಿರಂಜನ್, ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ನಗರಸಭೆ ಅಧ್ಯಕ್ಷ ಅಫ್ಸರ್ಪಾಷ, ಸದಸ್ಯರಾದ ಚಿಕ್ಕಮುನಿಯಪ್ಪ, ಕೇಶವಮೂರ್ತಿ, ಆಯುಕ್ತ ಚಲಪತಿ, ರೈತಸಂಘದ ಜೆ.ಎಸ್.ವೆಂಕಟಸ್ವಾಮಿ, ರವಿಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಯಾಸ್ಮೀನ್ತಾಜ್ ಹಾಜರಿದ್ದರು.
- Advertisement -
- Advertisement -
- Advertisement -