Sidlaghatta : ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಭಾರತ್ ಜೋಡೋ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರು 3500 ಕಿ.ಮೀ ಪಾದಯಾತ್ರೆ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಅಧಿಕಾರದ ಆಸೆಯಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಿ ಪ್ರತಿಯೊಂದು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ, ಕರ್ನಾಟಕದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ರೈತ ಮತ್ತು ಜನವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವ ಬಿಜೆಪಿ ಸರ್ಕಾರಗಳನ್ನು ಅಧಿಕಾರದಿಂದ ಕಿತ್ತೊಗೆಯಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಲೋಕಸಭೆ ಅಥವಾ ವಿಧಾನಸಭೆಯ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ವಾತಂತ್ರ್ಯವಿದೆ. ಟಿಕೆಟ್ ನೀಡುವ ಅಧಿಕಾರವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ಹೊಂದಿದ್ದಾರೆ. ಹೀಗಾಗಿ ನಮಗೆ ಮೊದಲು ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿ ದುರಾಡಳಿತ ನಡೆಸುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ದೂರಗೊಳಿಸುವ ಕಾರ್ಯಕ್ರಮವನ್ನು ಮಾಡಬೇಕಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಮಾತನಾಡಿ, ದೇಶದಲ್ಲಿ ಭ್ರಷ್ಟಾಚಾರದ ಗಂಗೋತ್ರಿ ಹರಿಯುತ್ತಿದೆ. ರಾಜ್ಯದಲ್ಲಿ ಶೇ 40 ರಷ್ಟು ಕಮಿಷನ್ ನಡೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ನಾನು ತಿನ್ನುವುದಿಲ್ಲ, ತಿನ್ನುವುದಕ್ಕೆ ಬಿಡುವುದಿಲ್ಲ ಎಂದು ಭಾಷಣ ಬಿಗಿಯುತ್ತಾರೆ. ಆದರೆ ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಉದ್ಯಮಿಗಳಾದ ಅದಾನಿ ಮತ್ತು ಅಂಬಾನಿ ಅವರ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡುವುದರಲ್ಲಿ ತೊಡಗಿದ್ದಾರೆಂದು ಗಂಭೀರವಾಗಿ ಆರೋಪಿಸಿ, ದೇಶದಲ್ಲಿ ಸಂವಿಧಾನವನ್ನು ಉಳಿಸಲು ಮತ್ತು ಸಾಮರಸ್ಯವನ್ನು ಕಾಪಾಡಲು ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಕರೆ ನೀಡಿದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬರುತ್ತಿದ್ದೇನೆ. ಮುಂದಿನ 10 ವರ್ಷಗಳು ಸಹ ರಾಜಕಾರಣ ಮಾಡಲು ಶಕ್ತಿಯನ್ನು ಹೊಂದಿದ್ದೇನೆ. ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಧೃಡನಾಗಿದ್ದೇನೆ. ನಾನು ಅಥವಾ ನನ್ನ ಪುತ್ರ ಡಾ.ಎಂ.ಶಶಿಧರ್ ಅವರು ಚುನಾವಣೆಯನ್ನು ಎದುರಿಸಲು ಸಿದ್ದರಿದ್ದೇವೆ. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಮಾಡಲು ಪ್ರಯತ್ನಿಸುತ್ತಿರುವ ದಲ್ಲಾಳಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಮುಖಂಡರು ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ್ ಶಂಕರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ಶಾಸಕ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ಅವರನ್ನು ಬಹುಮತದಿಂದ ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಮುನಿಯಪ್ಪ, ಎಪಿಎಂಸಿ ನಿರ್ದೇಶಕ ದೊಗರನಾಯಕನಹಳ್ಳಿ ವೆಂಕಟೇಶ್, ಕೆಎಂಎಫ್ ನಿರ್ದೇಶಕ ಆರ್.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮುದಸೀರ್, ಮಧುಸೂಧನ್, ಸಾದಿಕ್, ಮಹಬೂಬ್, ಜಂಗಮಕೋಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಪಂಚಾಕ್ಷರೆಡ್ಡಿ, ಗಂಜಿಗುಂಟೆ ಮೌಲಾ, ಪಂಪ್ ನಾಗರಾಜ್, ಬಾಂಬೆ ನವಾಜ್ ಹಾಜರಿದ್ದರು.
ಕೆ.ಪಿ.ಸಿ.ಸಿ ಕೋ-ಆರ್ಡಿನೇಟರ್ ರಾಜೀವ್ ಗೌಡ ಶಕ್ತಿ ಪ್ರದರ್ಶನ:
ಶಿಡ್ಲಘಟ್ಟಕ್ಕೆ ಚಿಕ್ಕಬಳ್ಳಾಪುರದ ಕಡೆಯಿಂದ ಆಗಮಿಸಿದ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ನೇತೃತ್ವದ ಕಾಂಗ್ರೆಸ್ ವರಿಷ್ಠರ ತಂಡವನ್ನು ನಗರವನ್ನು ಪ್ರವೇಶಿಸುವ ಸ್ಥಳದಲ್ಲಿ ಕೆ.ಪಿ.ಸಿ.ಸಿ ಕೋ-ಆರ್ಡಿನೇಟರ್ ರಾಜೀವ್ ಗೌಡ ಮತ್ತು ಬೆಂಬಲಿಗರು ಹಾರವನ್ನು ಹಾಕಿ ಬರಮಾಡಿಕೊಂಡರು. ಸಿದ್ಧರಾಮೋತ್ಸವ ಹಾಗೂ ಮೇಕೆದಾಟು ಪಾದಯಾತ್ರೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದಿಂದ ಸಾವಿರಾರು ಜನರೊಂದಿಗೆ ತೆರಳಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ್ದೇವೆ. ಕ್ಷೇತ್ರದಲ್ಲಿಯೂ ಹಲವಾರು ಸಾಮಾಜಿಕ ಕಾರ್ಯ ನಡೆಸುತ್ತಾ ಜನರ ಮನಗೆದ್ದಿದ್ದೇವೆ ಎಂದು ವೀಕ್ಷಕರಿಗೆ ವಿವರಿಸಿದರು. ಭಾರತ್ ಜೋಡೋ ಅಭಿಯಾನ ಕಾರ್ಯಕ್ರಮದ ಯಶಸ್ಸಿಗೆ ದುಡಿಯುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜೀವ್ ಗೌಡ ಅವರ ಬೆಂಬಲಿಗರು ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಮುಖಂಡರ ಮನ ಗೆಲ್ಲಲು ಪ್ರಯತ್ನಿಸಿದರು.
ನಗರಸಭೆ ಉಪಾಧ್ಯಕ್ಷ ಅಫ್ಸರ್ ಪಾಷ, ಬಾಲಕೃಷ್ಣ, ನಾರಾಯಣಸ್ವಾಮಿ ಬಂಗಾರಪ್ಪ, ರವಿ, ಅಬ್ದುಲ್ ಗಫೂರ್, ಸಾಧಿಕ್ ಹಾಜರಿದ್ದರು.