
ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ವಿ.ಮುನಿಯಪ್ಪ ಶುಕ್ರವಾರ ಭೇಟಿ ನೀಡಿ ಮುಖಂಡರ ಜೊತೆ ಮಾತನಾಡಿ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.
ನಗರದ ಹೃದಯ ಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಆದಷ್ಟು ಬೇಗ ಸುಸಜ್ಜಿತ ಭವನ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿಯೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ತ್ವರಿತವಾಗಿ ನೆರವೇರಿಸುವ ಜೊತೆಗೆ, ಸುಸಜ್ಜಿತ ಕಟ್ಟಡ ನಿರ್ಮಿಸುವ ಭರವಸೆ ನೀಡಿದ ಅವರು, ಯಾವುದೇ ಒಂದು ಕಟ್ಟಡ ನಿರ್ಮಾಣ ಮಾಡುವಾಗ ಅದಕ್ಕೆ ಬೇಕಾದ ಎಲ್ಲಾ ಮೂಲಭೂತ ಸವಲತ್ತುಗಳನ್ನು ಕಲ್ಪಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಈ ಹಿಂದೆ ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿದ್ದೇವಾದರೂ ಇಂದಿನ ಪರಿಸ್ಥಿತಿಗೆ ತಕ್ಕಂತೆ ಅದು ಇಲ್ಲ. ಹಾಗಾಗಿ ನಗರದ ಹೃದಯ ಭಾಗದಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ, ಬಾಬು ಜೀವನರಾಂ ಭವನ ಸೇರಿದಂತೆ ಉದ್ಯಾನವನಕ್ಕಾಗಿ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದಷ್ಟು ತ್ವರಿತವಾಗಿ ಭವನ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿ ಉಪವಾಸ ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದರು.
ಶಾಸಕರ ಮನವಿಗೆ ಸ್ಪಂದಿಸಿದ ಹೋರಾಟಗಾರರು ಇದೀಗ ಉಪವಾಸ ಸತ್ಯಾಗ್ರಹ ಕೈಬಿಡುತ್ತಿದ್ದು ತ್ವರಿತವಾಗಿ ಭವನ ನಿರ್ಮಾಣ ಕಾಮಗಾರಿ ಆಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿ ಪ್ರತಿಭಟನೆಯನ್ನು ಹಿಂಪಡೆದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಶಾಸಕರು ಸೇರಿದಂತೆ ದಲಿತ ಮುಖಂಡರ ನೇತೃತ್ವದಲ್ಲಿ ಪ್ರಸ್ತಾವನೆಯನ್ನು ಸೋಮವಾರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದ್ದು ಅವರೊಂದಿಗೆ ಚರ್ಚಿಸಿ ಸರ್ಕಾರದಿಂದ ಅನುಮೋದನೆ ಪಡೆದು ಆದಷ್ಟು ಬೇಗ ಭವನ ನಿಮಾಣ ಕಾರ್ಯ ಶುರುಮಾಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಗಂಜಿಗುಂಟೆ ನರಸಿಂಹಮೂರ್ತಿ, ಕಾರ್ಯದರ್ಶಿ ಈಧರೆ ಪ್ರಕಾಶ್, ಎನ್ ಎಸ್ ಯು ಐ ರಾಜ್ಯ ಸಂಚಾಲಕ ಕೆ.ನ್.ಮುನೀಂದ್ರ, ಎನ್.ಎ.ವೆಂಕಟೇಶ್, ತಾತಹಳ್ಳಿ ಚಲಪತಿ, ದೇವರಮಳ್ಳೂರು ಕೃಷ್ಣಪ್ಪ, ಜೆ.ವೆಂಕಟಾಪುರ ವಿಜಯಕುಮಾರ, ಬೈಯಪ್ಪನಹಳ್ಳಿ ಗುರುಮೂರ್ತಿ, ನಾಗ ನರಸಿಂಹ, ಮುನಿನರಸಿಂಹ, ದೇವರಾಜ್ ಹಾಜರಿದ್ದರು.