Home News ಜ್ಞಾನಾಂಕುರ-2023 ಕಾರ್ಯಕ್ರಮ

ಜ್ಞಾನಾಂಕುರ-2023 ಕಾರ್ಯಕ್ರಮ

0
BGS School Sidlaghatta Jnanankura 2023

Sidlaghatta : ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಪಠ್ಯ ಶಿಕ್ಷಣದ ಜತೆಗೆ ಮನೆಯಲ್ಲಿ ಪಾಲಕರು ಕಲಿಸುವ ಸಂಸ್ಕಾರದ ಶಿಕ್ಷಣ ಅತಿ ಮುಖ್ಯ ಎಂದು ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ಹೇಳಿದರು.

ಶಿಡ್ಲಘಟ್ಟ ನಗರದ ಹೊರವಲಯದ ಹನುಮಂತಪುರದ ಬಿಜಿಎಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜ್ಞಾನಾಂಕುರ-೨೦೨೩ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಿ ಮಾತನಾಡಿದರು.

ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಭವಿಷ್ಯ ರೂಪಿಸುವ ಆಸೆ ಎಲ್ಲ ಪಾಲಕರಿಗಿರುತ್ತದೆ. ಅದಕ್ಕೆ ಪೂರಕವಾಗಿ ಆಧುನಿಕ ಜಗತ್ತಿನ ಪ್ರವೇಶಕ್ಕೆ ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿಯೇ ಅಣಿಗೊಳಿಸುವುದು ಶ್ರೀಮಠದ ಉದ್ದೇಶವಾಗಿದೆ. ಹುಟ್ಟಿದ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕಿದೆ ಎಂದರು. ಮಕ್ಕಳು ಶಾಲೆಯಲ್ಲಿ ಗುರುಗಳು ಹೇಳಿದ್ದನ್ನು ಕೇಳುವುದಕ್ಕಿಂತ ಹೆಚ್ಚಾಗಿ ಪೋಷಕರನ್ನು ಅನುಕರಣೆ ಮಾಡಿ ಕಲಿಯುವುದು ಹೆಚ್ಚು ಹಾಗಾಗಿ ಪ್ರತಿಯೊಬ್ಬ ಪೋಷಕರು ಮಕ್ಕಳ ಮುಂದೆ ಸಂಸ್ಕಾರಯುತವಾಗಿ ನಡೆದುಕೊಳ್ಳಬೇಕು ಎಂದರು.

ಬಿಜಿಎಸ್ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಮಾತನಾಡಿ ಯಾವುದೇ ಕಾರಣಕ್ಕೂ ಪುಟಾಣಿ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ, ಇದರ ಬೆಳಕಿನಿಂದ ಮಕ್ಕಳು ಕುರುಡಾಗುವ ಸಾಧ್ಯತೆ ಇರುತ್ತದೆ. ಮನೆಯಲ್ಲಿರುವ ಮಕ್ಕಳಲ್ಲಿ ಗಂಡು ಹೆಣ್ಣು ಎಂಬ ತಾರತಮ್ಯ ಮಾಡದೇ ಎಲ್ಲಾ ಸಮಯದಲ್ಲಿ ಎಲ್ಲಾ ಕೆಲಸಗಳನ್ನು ಎಲ್ಲಾ ಮಕ್ಕಳ ಕೈಯ್ಯಲ್ಲಿ ಮಾಡಿಸಬೇಕು. ಮಕ್ಕಳನ್ನು ಅವರ ಸಮಸ್ಯೆಗಳಿಗೆ ಅವರೇ ಪರಿಹಾರ ಕಂಡುಕೊಳ್ಳುವ ರೀತಿ ಬೆಳೆಸುವ ಜೊತೆಗೆ ಪಾಲಕರು ಸಮಯಪ್ರಜ್ಞೆ ರೂಡಿಸಿಕೊಳ್ಳಿ ಇದರಿಂದ ತಮ್ಮ ಮಕ್ಕಳಲ್ಲಿಯೂ ಸಹ ಸಮಯ ಪ್ರಜ್ಞೆ ಬೆಳೆಯುತ್ತದೆ. ಇನ್ನು ಒಂದು ಮಗು ಪದವಿ ಪಡೆಯಬೇಕಾದರೆ ಸುಮಾರು ೧೯ ವರ್ಷ ಶಾಲಾ, ಕಾಲೇಜುಗಳಲ್ಲಿ ಕಲಿಯಬೇಕಿದೆ, ಹಾಗಾಗಿ ಪೋಷಕರು ತಿಂಗಳಿಗೊಮ್ಮೆಯಾದರೂ ಮಗು ಓದುತ್ತಿರುವ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಮಾತು ಕತೆ ನಡೆಸುವುದನ್ನು ರೂಡಿಸಿಕೊಳ್ಳಬೇಕು ಎಂದರು.

ನಗರದ ಬಿಜಿಎಸ್ ಪಬ್ಲಿಕ್ ಶಾಲೆ ಹಾಗು ತಾಲೂಕಿನ ದಿಬ್ಬೂರಹಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಆರಂಬಿಸಿರುವ ಬಿಜಿಎಸ್ ಇಂಗ್ಲೀಷ್ ಮಾಧ್ಯಮ ಶಾಲೆಯ ಮಕ್ಕಳಿಗೆ ಶ್ರೀಗಳು ಅಕ್ಷರಭ್ಯಾಸ ಮಾಡಿಸಿದರು.

ಈ ಸಂದರ್ಭದಲ್ಲಿ ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಆರ್.ಮಹದೇವ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಮಾಜಿ ತಾ.ಪಂ ಸದಸ್ಯ ಡಿ.ಎಸ್.ಎನ್.ರಾಜು ಮತ್ತಿತರರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version