
Bhaktarahalli, Sidlaghatta : ವಿಶ್ವ ಪರಿಸರ ದಿನದ ಅಂಗವಾಗಿ ಭಕ್ತರಹಳ್ಳಿಯ BMV ವಿದ್ಯಾಸಂಸ್ಥೆಯ ಪ್ರೌಢಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಹಸಿರು ನೆಡುವ ಕಾರ್ಯಕ್ರಮ:
ಸಂಸ್ಥೆಯ ಕಾರ್ಯದರ್ಶಿ ಎಲ್. ಕಾಳಪ್ಪ ಮತ್ತು ಸಂಸ್ಥಾಪಕ ಟ್ರಸ್ಟಿ ಎಸ್. ನಾರಾಯಣಸ್ವಾಮಿ ಅವರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇವರೊಂದಿಗೆ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.
ಪರಿಸರ ರಕ್ಷಣೆಗೆ ಕರೆ:
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಲ್. ಕಾಳಪ್ಪ ಮತ್ತು ಎಸ್. ನಾರಾಯಣಸ್ವಾಮಿ, “ಪರಿಸರದ ಸಮತೋಲನ ಕಾಪಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಮನೆಯ ಮುಂಭಾಗದಲ್ಲಿ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಮರವಾಗಿ ಬೆಳೆಸಬೇಕು. ಪರಿಸರ ಸಂರಕ್ಷಣೆ ಕೇವಲ ಘೋಷಣೆಯಾಗದೆ, ನಮ್ಮ ದಿನನಿತ್ಯದ ಬದುಕಿನ ಭಾಗವಾಗಬೇಕು” ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಾದ ಎನ್. ವೆಂಕಟಮೂರ್ತಿ ಹಾಗೂ ಎನ್. ಪಂಚಮೂರ್ತಿ ಉಪಸ್ಥಿತರಿದ್ದು, ಪರಿಸರ ಉಳಿವಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.