Chikkadasarahalli, Sidlaghatta : ಶಾಲಾ ಮಕ್ಕಳು ಬರೀ ಪಠ್ಯವನ್ನು ಓದುವುದಕ್ಕೆ ಸೀಮಿತವಾಗದೆ ಪ್ರಾಪಂಚಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ತಂದೆ ತಾಯಿಯು ನಿಮ್ಮನ್ನು ಓದಿಸಲಿಕ್ಕೆ ಎಷ್ಟು ಕಷ್ಟ ಪಡುತ್ತಾರೆ, ಕುಟುಂಬ ನಿರ್ವಹಣೆಯನ್ನು ಹೇಗೆ ನಿಭಾಯಿಸುತ್ತಾರೆ ಎಂದು ತಿಳಿದುಕೊಳ್ಳಬೇಕು ಎಂದು ಚಿಮುಲ್ನ ನೂತನ ನಿರ್ದೇಶಕ ಬಂಕ್ ಮುನಿಯಪ್ಪ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೀಗ ನಾವು ಸ್ಪರ್ಧಾ ಜಗತ್ತಿನಲ್ಲಿದ್ದೇವೆ. ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕಗಳನ್ನು ಗಳಿಸಿದರೆ ಸಾಲದು, ಉತ್ತಮ ವೃತ್ತಿ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ವ್ಯಾಪರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿನ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಿ ನಿಲ್ಲಬೇಕಿದೆ ಎಂದರು.
ಹಾಗಂತ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಅಂಕಗಳನ್ನು ಗಳಿಸುವಂತೆ ಅವರ ಮೇಲೆ ಹೆಚ್ಚಿನ ಒತ್ತಡ ಹಾಕುವ ಕೆಲಸಕ್ಕೆ ಪೋಷಕರು ಮತ್ತು ಶಿಕ್ಷಕರು ಮುಂದಾಗಬಾರದು. ಮಕ್ಕಳ ಕಲಿಕಾ ಸಾಮರ್ಥ್ಯ, ಆಸಕ್ತಿ, ಗ್ರಹಿಸುವ ಶಕ್ತಿಯನ್ನು ಅನುಸರಿಸಿ ಅವರಿಗೆ ಅವಕಾಶಗಳನ್ನು ಒದಗಿಸಿಕೊಡುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಹೇಳಿದರು.
ಇತ್ತೀಚಿನ ವರ್ಷಗಳಲ್ಲಿ ರೈತರು ಮದುವೆ ಮಾಡಲು ಮತ್ತು ಮನೆ ಕಟ್ಟಲು ಹೆಚ್ಚು ಹಣವನ್ನು ಖರ್ಚು ಮಾಡುವ ಪದ್ದತಿ ಹೆಚ್ಚುತ್ತಿದ್ದು ಇದರಿಂದ ಅನೇಕ ರೈತರು ಸಾಲದಲ್ಲಿ ಸಿಲುಕು ಒದ್ದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಉತ್ತಮ ಭವಿಷ್ಯವನ್ನು ರೂಪಿಸಿ ಎಂದು ಮನವಿ ಮಾಡಿದರು.
ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಚಿಮುಲ್ಗೆ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಕೃಷ್ಣಾರೆಡ್ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಎ.ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಲಕ್ಷ್ಮಿ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಅಧ್ಯಕ್ಷ ಸ್ಕೂಲ್ ದೇವರಾಜ್, ಬ್ಯಾಟರಾಯಸ್ವಾಮಿ ದೇವಾಲಯ ಅಭಿವೃದ್ದಿ ಸಮಿತಿ ಅಧ್ಯಕ್ಷ ಬ್ಯಾಟರಾಯಶೆಟ್ಟಿ, ಶಾಲಾ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.








