
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಶಂಕೆಯಿಂದ ಸುಮಾರು 20 ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದು, ಆರೋಗ್ಯ ಇಲಾಖೆಯು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದೆ.
ಕಳೆದ ಮಂಗಳವಾರದಿಂದ ಗ್ರಾಮದಲ್ಲಿ ಹಲವರಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ್ ಕುಮಾರ್, ಸರ್ವೇಕ್ಷಣಾಧಿಕಾರಿ ಕೃಷ್ಣಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಬಶೆಟ್ಟಹಳ್ಳಿ ಆರೋಗ್ಯ ಕೇಂದ್ರದ ಡಾ. ಸುಷ್ಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೇಮಾವತಿ ಹಾಗೂ ಆರೋಗ್ಯ ನಿರೀಕ್ಷಕ ದೇವರಾಜ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿ 165 ಮನೆಗಳಿದ್ದು, ಸುಮಾರು 720 ಜನಸಂಖ್ಯೆ ಇದೆ. ಗ್ರಾಮಕ್ಕೆ ಎರಡು ಮೂಲಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಗ್ರಾಮ ಪಂಚಾಯಿತಿಯ ಕೊಳವೆಬಾವಿಯಿಂದ ನೀರು ಸರಬರಾಜಾಗುತ್ತಿದ್ದು, ಖಾಸಗಿಯಾಗಿ ಗಂಜಿಗುಂಟೆಯ ಶುದ್ಧೀಕರಿಸಿದ ನೀರಿನ ಘಟಕದಿಂದಲೂ ಕುಡಿಯುವ ನೀರನ್ನು ತಂದು ಮಾರಾಟ ಮಾಡಲಾಗುತ್ತಿದೆ.
ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿರುವುದೇ ಗ್ರಾಮಸ್ಥರ ಆರೋಗ್ಯ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ ಮಾತನಾಡಿ, “ಯಾವುದೇ ಆತಂಕದ ಪರಿಸ್ಥಿತಿ ಇಲ್ಲ. ಅಸ್ವಸ್ಥಗೊಂಡಿರುವ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅಂಗನವಾಡಿ ಕೇಂದ್ರದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗಿದ್ದು, ವೈದ್ಯರು ಮತ್ತು ಸಿಬ್ಬಂದಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಗ್ರಾಮ ಪಂಚಾಯಿತಿಯಿಂದ ಒಡೆದಿದ್ದ ನೀರಿನ ಪೈಪ್ ದುರಸ್ತಿಪಡಿಸಲಾಗಿದೆ” ಎಂದು ತಿಳಿಸಿದರು.
In English: Around 20 residents of Chikkatekahalli village in Sidlaghatta taluk fell ill with vomiting and diarrhoea after suspected consumption of contaminated water, following a burst drinking-water pipe mixing with drainage water. District Health Officer Dr. Mahesh Kumar and a team inspected the village, set up a temporary treatment camp at the anganwadi centre, repaired the damaged pipeline, and sent water samples for testing. Taluk Health Officer Dr. Venkateshamurthy said the situation is under control and all affected persons are receiving treatment.