ತಾಲ್ಲೂಕಿನಾದ್ಯಂತ ಕೊರೋನಾ ಪ್ರಕರಣಗಳು ಪ್ರತಿನಿತ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಹಾಗೂ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರ್ಕಾರ ವಿಧಿಸಿದ್ದ ಲಾಕ್ ಡೌನ್ ಸಡಿಲಗೊಂಡ ಮಾತ್ರಕ್ಕೆ ಖಾಯಿಲೆ ಬರುವುದಿಲ್ಲ ಎಂಬ ಭಾವನೆಗೆ ಜನರು ಬಂದಿದ್ದು ವಿನಾಕಾರಣ ರಸ್ತೆಗಳಲ್ಲಿ ಓಡಾಡುವುದು, ಗುಂಪು ಗುಂಪಾಗಿ ಜನ ಸೇರುವಂತಹದ್ದನ್ನು ಮಾಡುತ್ತಿದ್ದಾರೆ. ಇದರಿಂದ ಪ್ರತಿನಿತ್ಯ ತಾಲೂಕಿನಲ್ಲಿ ಕೊರೋನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಮೃತ ಪಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ದೃಷ್ಠಿಯಿಂದ ಮಾಸ್ಕ್ ಧರಿಸುವ ಜೊತೆಗೆ ಮನೆಗೆ ಹೋದ ತಕ್ಷಣ ಕೈ ತೊಳೆಯುವುದು ಇಲ್ಲವಾದಲ್ಲಿ ಸ್ಯಾನಿಟೈಸ್ ಮಾಡಿಕೊಳ್ಳಿ. ಇದರಿಂದ ನಿಮ್ಮ ಆರೋಗ್ಯವಷ್ಟೇ ಕಾಪಾಡುವುದಲ್ಲ, ಬದಲಿಗೆ ಸುತ್ತಲೂ ಇರುವ ಸಮಾಜದ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ. ವಾಹನಸವಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಇಲ್ಲವಾದಲ್ಲಿ ತಾಲ್ಲೂಕು ಆಡಳಿತದಿಂದ ದಂಡ ವಿಧಿಸುವ ಜೊತೆಗೆ ಪ್ರಕರಣ ದಾಖಲಿಸಲಾಗುವುದು. ಮುಖ್ಯವಾಗಿ ಪ್ರತಿಯೊಬ್ಬರೂ ಪ್ರತಿ 14 ದಿನಗಳಿಗೊಮ್ಮೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಂಟಲುದ್ರವ ಪರೀಕ್ಷೆ ಮಾಡಕೊಳ್ಳಬೇಕು ಎಂದರು.
ಕೋವಿಡ್ 19, ನೋಡಲ್ ಅಧಿಕಾರಿ ಶಿವಕುಮಾರ್ ಮಾತನಾಡಿ ಇತ್ತೀಚೆಗೆ ಜನರಲ್ಲಿ ಕೊರೋನಾ ಬರುತ್ತೆ ಹೋಗುತ್ತೆ ಎಂಬ ಭಾವನೆ ಬಂದು ಬಿಟ್ಟಿದೆ. ದಯವಿಟ್ಟು ಈ ಭಾವನೆ ಜನರು ಬಿಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರಿಂದ ರೋಗ ಹರಡದಂತೆ ತಡೆಗಟ್ಟಬಹುದು.
ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಮಾತನಾಡಿ, ಕೊರೋನಾ ಹರಡದಂತೆ ತಡೆಯಲು ಬೇಕಾದ ಅಗತ್ಯ ಕ್ರಮಗಳನ್ನು ನಗರಸಭೆ ಯಿಂದ ಕೈಗೊಂಡಿದೆ. ನಗರದಲ್ಲಿ ಗುಟ್ಕಾ, ಸಿಗರೇಟ್ ಮಾರುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸುವ ಜೊತೆಗೆ ಮಾಸ್ಕ್ ಧರಿಸದೇ ಪ್ರಯಾಣಿಸುವ ವಾಹನ ಸವಾರರಿಗೆ ದಂಡ ವಿಧಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಚುರುಕುಗೊಳಿಸುವ ಮೂಲಕ ಹೆಚ್ಚಿನ ದಂಡ ವಿಧಿಸಲಾಗುವುದು. ಹಾಗಾಗಿ ಪ್ರತಿಯೊಬ್ಬರೂ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ತಾಲ್ಲೂಕು ಆಡಳಿತದ ಜೊತೆ ಸಹಕಾರ ನಿಡಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ, ನೋಡಲ್ ಅಧಿಕಾರಿ ಶಿವಕುಮಾರ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







