Sidlaghatta : ಸರ್ಕಾರದ ವಿವಿಧ ಯೋಜನೆಗಳು ಸೇರಿದಂತೆ ದ್ಯೇಯೋದ್ದೇಶಗಳು ಸಫಲವಾಗಬೇಕಾದರೆ ಅಧಿಕಾರಿಗಳ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಜವಾಬ್ದಾರಿ ಸಾರ್ವಜನಿಕರ ಮೇಲೆಯೂ ಇದೆ, ಪ್ರಮುಖವಾಗಿ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಲೋಕಾಯುಕ್ತ ಡಿ.ವೈ.ಎಸ್.ಪಿ ವೀರೇಂದ್ರಕುಮಾರ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತರಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸುವ ಸಭೆಯಲ್ಲಿ ಮಾತನಾಡಿದರು.
ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಕೆಲಸಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸಾರ್ವಜನಿಕರು ಪ್ರಶ್ನೆ ಮಾಡುವುದನ್ನು ರೂಡಿಸಿಕೊಳ್ಳಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಅಧಿಕಾರಿಗಳು ವಿಳಂಬ ಅಥವ ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಹಾಗು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮ ನಡೆಸಿ ಹಣ ದುರುಪಯೋಗ ಸೇರಿದಂತೆ ಲಂಚದ ಬೇಡಿಕೆಯನ್ನಿಟ್ಟರೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿ, ಅಗತ್ಯ ದಾಖಲೆಗಳೊಂದಿಗೆ ಲೋಕಾಯುಕ್ತ ಕಚೇರಿಗೆ ನೇರವಾಗಿ ಅಥವ ಅಂಚೆ ಮೂಲಕ ದೂರು ಸಲ್ಲಿಸಬಹುದು ಎಂದರು.
ಯಾವುದೇ ಕೆಲಸವಾದರೂ ಸಹಿ ಮಧ್ಯವರ್ತಿಗಳ ಮೂಲಕ ಹೋಗುವ ಬದಲಿಗೆ ನೇರವಾಗಿ ಸಂಬಂದಪಟ್ಟ ಅಧಿಕಾರಿಯನ್ನು ಭೇಟಿ ಮಾಡಿ ಮಾಡಿಸಿಕೊಳ್ಳುವ ಮನಸ್ಥಿತಿ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.
ಸರ್ಕಾರಿ ಅಧಿಕಾರಿಗಳು ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಕೆಲಸ ಮಾಡುವ ಜೊತೆಗೆ ಸಾರ್ವಜನಿಕರ ಭಾವನೆಗಳನ್ನು ಕೆರಳಿಸುವ ರೀತಿಯಲ್ಲಿ ನಡೆದುಕೊಳ್ಳಬಾರದು. ಸಾರ್ವಜನಿಕರಿಗೆ ಬಯಸಿದ ಕೆಲಸ ಮಾಡಲು ಯೋಗ್ಯವಾಗಿದ್ದು ಎಷ್ಟು ದಿನಗಳಲ್ಲಿ ಆಗುತ್ತದೆ ಅಥವ ಅವರ ಕೆಲಸ ಮಾಡಲು ಏನು ತೊಂದರೆಯಿದೆ ಎನ್ನುವುದನ್ನು ಅವರಿಗೆ ಅರ್ಥವಾಗುವ ರೀತಿ ತಿಳಿಹೇಳಿದರೆ ಬಹಳಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗುತ್ತದೆ ಎಂದರು.
ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ, ಆರ್.ಡಿ.ಪಿ.ಆರ್, ಅಬಕಾರಿ, ಶಿಕ್ಷಣ, ಎಸಿ ಕಚೇರಿ ಹಾಗು ಸಹಕಾರ ಸಂಘಗಳಿಗೆ ಸಂಬಂದಿಸಿದಂತೆ ಅರ್ಜಿದಾರರಿಂದ ಒಟ್ಟು 14 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮೋಹನ್ ಹೆಡ್ಡಣ್ಣವರ್, ತಹಶೀಲ್ದಾರ್ ಬಿ.ಎನ್.ಸ್ವಾಮಿ, ತಾ.ಪಂ ಇಓ ಜಿ.ಮುನಿರಾಜ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.