Sidlaghatta : ಕೃಷಿ ಮತ್ತು ರೈತರ ಪರ ನಡೆದ ವಿವಿಧ ಹೋರಾಟಗಳಲ್ಲಿ ಹುತಾತ್ಮರಾದ ರೈತರು ಹಾಗೂ ರೈತ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಉದ್ದೇಶದಿಂದ ಜುಲೈ 21ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ “ರೈತರ ಹುತಾತ್ಮ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಸಿರು ಸೇನೆ ಹಾಗೂ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು.
ನಗರದ ಸಾರಿಗೆ ಬಸ್ ನಿಲ್ದಾಣದ ಸಮೀಪದ ರೈತ ಸಂಘದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಮೊದಲು ಗದಗ ಜಿಲ್ಲೆಯ ನವಲಗುಂದ ಮತ್ತು ನರಗುಂದದಲ್ಲಿರುವ ರೈತ ಹುತಾತ್ಮರ ಸ್ಮಾರಕಗಳಿಗೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದರು.
ಬಳಿಕ ಮಹಾಲಿಂಗಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಹಾಗೂ ರೈತ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕೃಷಿ ಹಾಗೂ ರೈತರ ಹಕ್ಕುಗಳಿಗಾಗಿ ನಡೆದ ಹೋರಾಟಗಳಲ್ಲಿ ಪ್ರಾಣತ್ಯಾಗ ಮಾಡಿದ ಎಲ್ಲ ರೈತರಿಗೆ ಗೌರವ ನಮನ ಸಲ್ಲಿಸಲಾಗುವುದು ಎಂದು ಹೇಳಿದರು.
ಧಾರವಾಡ ಜಿಲ್ಲೆಯ ನವಿಲಾವತಿ ಅಣೆಕಟ್ಟು ನಿರ್ಮಾಣವಾದರೂ ಸ್ಥಳೀಯರಿಗೆ ಬೇಸಿಗೆ ವೇಳೆಯಲ್ಲಿ ಸಮರ್ಪಕವಾಗಿ ನೀರು ದೊರೆಯದ ಹಿನ್ನೆಲೆಯಲ್ಲಿ ನಡೆದ ಹೋರಾಟ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರ ಸಮಸ್ಯೆಗಳ ಕುರಿತು ನಡೆದ ಚಳವಳಿಗಳಲ್ಲಿ ಹುತಾತ್ಮರಾದವರನ್ನು ಸ್ಮರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಏನೆಲ್ಲಾ ಚರ್ಚೆ?
ಸಭೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳು, ರೈತರ ಸಮಸ್ಯೆಗಳು ಮತ್ತು ಸಂಕಷ್ಟಗಳ ಕುರಿತು ಚರ್ಚೆ ನಡೆಯಲಿದೆ. ವಿಶೇಷವಾಗಿ ಭೂ ಸ್ವಾಧೀನ–2013ರ ಕಾಯಿದೆಯನ್ನು ಮರು ಜಾರಿಗೆ ತರಲು ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ನಿರ್ಣಯ ಕೈಗೊಂಡು ಹಕ್ಕೊತ್ತಾಯ ಮಾಡಲಾಗುವುದು ಎಂದು ಬೈರೇಗೌಡ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೂ ನೂರಾರು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವೀರಾಪುರ ಮುನಿನಂಜಪ್ಪ ಹಾಗೂ ಗುಡಿಹಳ್ಳಿ ಕೆಂಪಣ್ಣ ಉಪಸ್ಥಿತರಿದ್ದರು.
In English: The Rythu Sangha (Karnataka State Farmers’ Association) will observe “Farmers’ Martyrs Day” on July 21 at Mahalingapura, Bagalkot district, to honour farmers and farmer leaders who died during agitations, including those at Navalgund and Nargund. State working president Byregowda announced the program at a press meet in Sidlaghatta, adding that hundreds of farmers from Chikkaballapur district will also take part.








