
Sidlaghatta : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ವತಿಯಿಂದ ಅಂತಿಮ ವರ್ಷದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಭಾಗಗಳ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮಕ್ಕೆ ತಾಲ್ಲೂಕಿನ ಕೆ.ಮುತ್ತುಕದಹಳ್ಳಿ ಗ್ರಾಮದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಮುಂದಿನ ಮೂರು ತಿಂಗಳ ಕಾಲ ವಿದ್ಯಾರ್ಥಿಗಳು ಗ್ರಾಮದಲ್ಲೇ ವಾಸ್ತವ್ಯ ಹೂಡಿ ರೈತರೊಂದಿಗೆ ನೇರ ಸಂಪರ್ಕ ಸಾಧಿಸಿ ಕೃಷಿ ಚಟುವಟಿಕೆಗಳ ಅಧ್ಯಯನ ನಡೆಸಲಿದ್ದಾರೆ.
ಈ ಅವಧಿಯಲ್ಲಿ ವಿದ್ಯಾರ್ಥಿಗಳು ರೈತರ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ, ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಕೆ.ಎಂ.ಎಫ್ ನಿರ್ದೇಶಕ ಆರ್. ಶ್ರೀನಿವಾಸ್, ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮವು ವಿದ್ಯಾರ್ಥಿಗಳ ಕಲಿಕೆಯೊಂದಿಗೆ ರೈತರಿಗೆ ವೈಜ್ಞಾನಿಕ ಮಾಹಿತಿ ತಲುಪಿಸುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದರು. ಹವಾಮಾನ ವೈಪರೀತ್ಯ, ನೀರಿನ ಅಭಾವ ಹಾಗೂ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚದ ನಡುವೆ ಹೊಸ ತಂತ್ರಜ್ಞಾನಗಳ ಅಳವಡಿಕೆ ಅಗತ್ಯ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಯಾವ ಮಾರ್ಗದರ್ಶನ ದೊರೆಯಲಿದೆ?
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ರವಿಕುಮಾರ್, ಕಡಿಮೆ ಮಳೆಯ ಹಿನ್ನೆಲೆಯಲ್ಲಿ ಪರ್ಯಾಯ ಬೆಳೆ, ಬೆಳೆ ವೈವಿಧ್ಯತೆ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಪ್ರಾಧ್ಯಾಪಕಿ ಡಾ. ಕೆ.ಜೆ. ಸೌಮ್ಯ, ಬೀಜೋಪಚಾರದಿಂದ ರೋಗ ನಿಯಂತ್ರಣ, ಉತ್ತಮ ಮೊಳಕೆ ಹಾಗೂ ಹೆಚ್ಚಿನ ಇಳುವರಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಶ್ರೀಕಾಂತ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ್, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
In English: Bengaluru Agricultural University (GKVK) launched a Rural Agricultural Work Experience Programme for final-year agriculture students at K. Muttukadahalli village on Monday. Students will stay in the village for three months, working directly with farmers on scientific solutions, modern farming technology and government schemes. Former KMF director R. Srinivas inaugurated the programme; GKVK professors Dr. Ravikumar and Dr. K.J. Soumya advised farmers on alternate cropping and seed treatment.
ಇಂತಹುದೇ ಕಾರ್ಯಕ್ರಮಗಳ ಕುರಿತು ಕೊತ್ತನೂರಿನಲ್ಲಿ GKVK ವಿದ್ಯಾರ್ಥಿಗಳ ಕೃಷಿ ಕಾರ್ಯಕ್ರಮ ಮತ್ತು GKVK ವಿದ್ಯಾರ್ಥಿಗಳ ಕೃಷಿ ಕ್ಷೇತ್ರೋತ್ಸವ ವರದಿಗಳನ್ನು ವೀಕ್ಷಿಸಿ.