Sidlaghatta : ಗೃಹಜ್ಯೋತಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿ ಸರ್ಕಾರದ ಅನುದಾನ ದುರುಪಯೋಗ ತಡೆಯುವಂತೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನಾ ಅರ್ಜಿ ವಿತರಣೆ ಹಾಗೂ ಸಮೀಕ್ಷೆ ಕುರಿತ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಫಲಾನುಭವಿಗಳ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸುವ ಸಿಬ್ಬಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಇತ್ತೀಚಿನ ವಿದ್ಯುತ್ ಬಿಲ್ (ಆರ್.ಆರ್. ಸಂಖ್ಯೆ), ಮತದಾರರ ಗುರುತಿನ ಚೀಟಿ ಹಾಗೂ ಅಗತ್ಯವಿದ್ದಲ್ಲಿ ಬಾಡಿಗೆ ಒಪ್ಪಂದ ಪತ್ರ ಒದಗಿಸಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಗೊಂದಲವಿದ್ದರೆ ಏನು ಮಾಡಬೇಕು?
ಸಮೀಕ್ಷೆ ಕುರಿತು ಯಾವುದೇ ಗೊಂದಲ ಅಥವಾ ಸಮಸ್ಯೆ ಇದ್ದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರನ್ನು ಅಥವಾ ಅಧ್ಯಕ್ಷರನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಮುನಿಯಪ್ಪ ತಿಳಿಸಿದರು. ಅರ್ಹರಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಪಾರದರ್ಶಕತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳಿಸಿ, ಅರ್ಹ ಫಲಾನುಭವಿ ಯೋಜನೆಯಿಂದ ವಂಚಿತರಾಗದಂತೆ ಎಚ್ಚರ ವಹಿಸುವಂತೆಯೂ ಸೂಚಿಸಿದರು.
ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಸಮಿತಿ ಸದಸ್ಯರು, ಬೆಸ್ಕಾಂ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.
In English: Taluk Guarantee Schemes Implementation Committee chairman H.M. Muniyappa has directed officials to strictly verify Gruha Jyothi scheme beneficiaries and identify ineligible recipients to prevent misuse of government funds, at a meeting held Friday at the Taluk Panchayat hall. Residents were asked to cooperate with verification staff by providing Aadhaar card, ration card, a recent electricity bill (RR number), voter ID, and a rental agreement where applicable. Officials were directed to complete the survey within the stipulated time while ensuring no eligible beneficiary is excluded.








