
Jangamakote, Sidlaghatta : ರೈತರ ಪರ ಎಂದು ಹೇಳಿಕೊಳ್ಳುವ ರಾಜ್ಯ ಸರ್ಕಾರ, ಬಂಡವಾಳಶಾಹಿಗಳ ಮರ್ಜಿಗೆ ಬಿದ್ದು ಫಲವತ್ತಾದ ಕೃಷಿ ಭೂಮಿಯನ್ನು ರೈತರ ಒಪ್ಪಿಗೆ ಇಲ್ಲದೆ ಬಲವಂತಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಕಮಿಟಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಲರಾಂ ಎಚ್ಚರಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ ರೈತರ ಜಮೀನುಗಳ ಸ್ವಾದೀನಕ್ಕೆ ಮುಂದಾಗಿರುವುದನ್ನು ಖಂಡಿಸಿ ನಡೆದ ಸುದ್ದಿಘೋಷ್ಠಿಯಲ್ಲಿ ಅವರು ಮಾತನಾಡಿದರು.
ನಾವು ಕೈಗಾರಿಕೆಗಳ ವಿರೋಧಿಗಳಲ್ಲ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಳ್ಳುವುದನ್ನು ಬಲವಾಗಿ ವಿರೋಧಿಸುತ್ತೇವೆ. ನೀವು ಕೈಗಾರಿಕೆಗಳನ್ನು ಮಾಡುವುದೇ ಆದರೆ ತಾಲ್ಲೂಕಿನ ದಿಬ್ಬೂರಹಳ್ಳಿ, ಸಾದಲಿ ಭಾಗದಲ್ಲಿನ ಕೃಷಿಗೆ ಯೋಗ್ಯವಲ್ಲದ ಜಮೀನುಗಳಲ್ಲಿ ಮಾಡಿ, ನಮ್ಮದೇನೂ ಅಡ್ಡಿಯಿಲ್ಲ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಜಂಗಮಕೋಟೆ ಭಾಗದಲ್ಲಿ ಫಲವತ್ತಾದ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಅನ್ಯಾಯವಾಗುತ್ತದೆ. ಹಾಗಾಗಿ ಕೂಡಲೇ ಭೂ ಸ್ವಾದೀನ ಪ್ರಕ್ರಿಯೆ ಕೈಬಿಟ್ಟು ಕೃಷಿಗೆ ಯೋಗ್ಯವಲ್ಲದ ಭೂಮಿ ಗುರುತಿಸಿ ಕೈಗಾರಿಕಾ ವಲಯ ಸ್ಥಾಪಿಸಿ ಎಂದರು.
ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಮತ್ತು ಸಾದಲಿ ಹೋಬಳಿ ಭಾಗಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ, ಈ ಭಾಗದ ಸಾವಿರಾರು ನಿರುದ್ಯೋಗಿ ಯುವಕರಿಗೆ ಸ್ಥಳೀಯವಾಗಿಯೇ ಕೆಲಸ ಸಿಗಲಿದೆ. ಪ್ರಸ್ತುತ ಉದ್ಯೋಗಕ್ಕಾಗಿ ಅಲೆಯುತ್ತಿರುವ ಪದವೀಧರರಿಗೆ ಇದು ವರದಾನವಾಗಲಿದ್ದು, ತಾಲ್ಲೂಕಿನ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಕಮಿಟಿ ಜಿಲ್ಲಾಧ್ಯಕ್ಷ ದ್ಯಾವಪ್ಪ, ತಾಲ್ಲೂಕು ಗೌರವಾಧ್ಯಕ್ಷ ಕುಂದಲಗುರ್ಕಿ ನಟರಾಜ್, ಪದಾಧಿಕಾರಿಗಳಾದ ವೆಂಕಟೇಶ್, ಅರುಣ್, ಗಜೇಂದ್ರ, ಮನಿಲಕ್ಷ್ಮಮ್ಮ, ನವೀನ್ ಹಾಜರಿದ್ದರು.