Home News KIADB ಭೂಸ್ವಾಧೀನ ವಿರೋಧಿ ರೈತ ಮುಖಂಡರ ಬಂಧನ: ಪ್ರತಿಭಟನೆ

KIADB ಭೂಸ್ವಾಧೀನ ವಿರೋಧಿ ರೈತ ಮುಖಂಡರ ಬಂಧನ: ಪ್ರತಿಭಟನೆ

0
KADB Farmer Leaders Arrest Protest

Sidlaghatta : ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನವನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಸೇರಿದಂತೆ ಪ್ರಮುಖ ರೈತ ಮುಖಂಡರನ್ನು ಬೆಂಗಳೂರಿನಲ್ಲಿ ಬಂಧಿಸಿರುವುದನ್ನು ಖಂಡಿಸಿ, ರೈತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು.

ಬಂಧನದ ಹಿನ್ನೆಲೆ:

ಕೆಐಎಡಿಬಿ (KIADB) ಕಚೇರಿಯ ಬಳಿ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭೂಸ್ವಾಧೀನ ವಿರೋಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ರೈತರು ಕಳೆದ 95 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಬೆಂಗಳೂರು ಚಲೋ’ ಬೈಕ್ ರ‍್ಯಾಲಿಯನ್ನು ಪೊಲೀಸರು ತಡೆದಿದ್ದರು. ಈ ವೇಳೆ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಜಿ. ಪ್ರಭು ಅವರು, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆಗೆ ದಿನಾಂಕ ನಿಗದಿಪಡಿಸುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಮಾತುಕತೆಗಾಗಿ ಕೆಐಎಡಿಬಿ ಕಚೇರಿಗೆ ತೆರಳಿದ್ದ ವೇಳೆ, ರೈತ ಮುಖಂಡರನ್ನು ಪೊಲೀಸರು ಏಕಾಏಕಿ ಬಂಧಿಸಿದ್ದಾರೆ.

ರಸ್ತೆ ತಡೆ ಮತ್ತು ಮಾನವ ಸರಪಳಿ:

ಮುಖಂಡರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ರೈತರು, ಶಿಡ್ಲಘಟ್ಟದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಮತ್ತು ಕೆಐಎಡಿಬಿ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಿದರು.

ಉದ್ದೇಶಪೂರ್ವಕ ಬಂಧನ – ಬೈರೇಗೌಡ ಆರೋಪ:

ಬಂಧನದ ಕುರಿತು ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, “ನಾವು ಈ ಹಿಂದೆಯೂ ಹಲವು ಬಾರಿ ನೂರಾರು ರೈತರೊಂದಿಗೆ ಕೆಐಎಡಿಬಿ ಕಚೇರಿಗೆ ಬಂದಿದ್ದೆವು. ಆದರೆ ಇಂದು ಸಭೆಗೆಂದು ಅಧಿಕೃತವಾಗಿ ಆಹ್ವಾನಿಸಿ, ನಂತರ ನಮ್ಮನ್ನು ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರವು ಮಾತುಕತೆಯ ನೆಪದಲ್ಲಿ ರೈತರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿರುವ ರೈತ ಸಂಘಟನೆಗಳು, ತಮ್ಮ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿವೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version