ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಕುರಿತಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವವನ್ನು ತಾಲ್ಲೂಕು ಆಡಳಿತದಿಂದ ಅತ್ಯಂತ ಸರಳವಾಗಿ ಆಚರಿಸಲಾಗುವುದು. ಎಲ್ಲಾ ಕನ್ನಡಪರ ಸಂಘಟನೆಗಳು ಕೈಜೋಡಿಸಬೇಕು ಎಂದು ಅವರು ತಿಳಿಸಿದರು.
ನಗರದ ಬಸ್ ನಿಲ್ದಾಣದ ಬಳಿ ಸಲ್ಲಾಪುರಮ್ಮ ದೇವಸ್ಥಾನದ ಬಳಿ ಧ್ವಜಾರೋಹಣ ಮಾಡಲಾಗುವುದು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಕನ್ನಡಪರ ಕೆಲಸ ಮಾಡಿದವರು, ಸಾಹಿತ್ಯ, ಸಂಸ್ಕೃತಿ, ಕಲೆ ಕ್ಷೇತ್ರಗಳನ್ನು ಸಾಧನೆ ಮಾಡಿರುವವರನ್ನು ತಾಲ್ಲೂಕು ಮಟ್ಟದಲ್ಲಿ ಗುರುತಿಸಿ ಸನ್ಮಾನ ಮಾಡಲಾಗುವುದು. ಸಾಧಕರ ಪಟ್ಟಿಯನ್ನು ತಯಾರಿಸುವ ಜವಾಬ್ದಾರಿ ಕಸಾಪ ತಾಲ್ಲೂಕು ಅಧ್ಯಕ್ಷರಿಗೆ ವಹಿಸಿದ್ದು, ಸಾಧಕರ ವಿವರವನ್ನು ಸಂಗ್ರಹಿಸಿದ ನಂತರ ತಾಲ್ಲೂಕು ಆಡಳಿತ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಕನ್ನಡ ಭವನಕ್ಕೆ ಮನವಿ : ಶಿಡ್ಲಘಟ್ಟ ನಗರದಲ್ಲಿ ಕನ್ನಡಪರ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಕನ್ನಡ ಭವನ ನಿರ್ಮಿಸಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಅವರಿಗೆ ಕಸಾಪ ಹಾಗೂ ಕನ್ನಡಪರ ಸಂಘಟನೆಗಳ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕನ್ನಡಪರ ಸಂಘಟನೆಗಳ ಮುಖಂಡರಾದ ಜೆ.ಎಸ್.ವೆಂಕಟಸ್ವಾಮಿ, ನಾರಾಯಣಸ್ವಾಮಿ, ಪ್ರತೀಶ್, ತಾದೂರು ಮಂಜುನಾಥ್, ಶಂಕರ್ ಹಾಜರಿದ್ದರು.