Sidlaghatta : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅವರು ಶುಕ್ರವಾರ ಶಿಡ್ಲಘಟ್ಟ ತಾಲ್ಲೂಕಿಗೆ ಭೇಟಿ ನೀಡಿದ್ದರು.
ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ, ಗಂಜಿಗುಂಟೆ ಗ್ರಾಮ ಪಂಚಾಯಿತಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಕಾರ್ಮಿಕ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಸಹಾಯ ಹಸ್ತ ಕಾರ್ಡ್ ವಿತರಿಸಿದರು. ಅಲ್ಲಿಯ ಸ್ಥಳೀಯರು ತಮ್ಮ ಮೂಲ ನೆಲೆಯ ದಾಖಲಾತಿಗಳು ಸಮರ್ಪಕವಾಗಿಲ್ಲದಿರುವುದರ ಬಗ್ಗೆ ಸಮಸ್ಯೆಗಳನ್ನು ತೋಡಿಕೊಂಡರು. ತಹಶೀಲ್ದಾರ್ ಗಗನಸಿಂಧು ಅವರು ಈಗಾಗಲೇ ಕಂದಾಯ ಗ್ರಾಮ ಮಾಡಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಹೇಳಿದರು.
ಕುಂದಲಗುರ್ಕಿ ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿಯಲ್ಲಿನ ಚನ್ನದಾಸರ್ ಅಲೆಮಾರಿ ಕುಟುಂಬಗಳ ಕಾಲೋನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳ ಜತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಚರ್ಚಿಸಿದರು. ನಗರದ ಆಶಾಕಿರಣ ಅಂಧಮಕ್ಕಳ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜತೆ ಮಾತನಾಡಿದರು.
ಕುಂದಲಗುರ್ಕಿ ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿಯಲ್ಲಿನ ಚನ್ನದಾಸರ್ ಅಲೆಮಾರಿ ಕುಟುಂಬಗಳ ಕಾಲೋನಿಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಭೇಟಿ ನೀಡಿ ಕುಂದುಕೊರತೆಗಳನ್ನು ಆಲಿಸಿದರು. ನಗರದ ಆಶಾಕಿರಣ ಅಂಧಮಕ್ಕಳ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜತೆ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅವರು, “ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿಗಳಿಗೆ ಶಾಶ್ವತ ನೆಲೆ ಕಲ್ಪಿಸಲು ಒಂದು ಪ್ರತ್ಯೇಕ ಯೋಜನೆಗಳನ್ನು ಘೋಷಣೆ ಮಾಡುವ ಜೊತೆಗೆ 99 ಸಮುದಾಯಗಳ ಜ್ವಲಂತ ಸಮಸ್ಯೆಗಳ ಪರಿಹಾರ ಮತ್ತು ಅಭಿವೃದ್ಧಿಗಾಗಿ ಶಾಶ್ವತ ಆಯೋಗವನ್ನು ರಚನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅವರಿಗೆ ನಿಗಮದಿಂದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ” ಎಂದು ಹೇಳಿದರು.
ತಹಶೀಲ್ದಾರ್ ಗಗನಸಿಂಧು, ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕ ತೇಜ್ ಆನಂದರೆಡ್ಡಿ, ಐ.ಎನ್.ಟಿ.ಯು.ಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ, ಪರಿಶಿಷ್ಠ ಪಂಗಡಗಳ ಜಿಲ್ಲಾ ಅಧಿಕಾರಿ ಪ್ರವೀಣ್, ಜಿಲ್ಲಾ ಪರಿಶಿಷ್ಟ ಪಂಗಡದ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ್, ತಾಲ್ಲೂಕು ಕಾರ್ಮಿಕ ಅಧಿಕಾರಿ ವಿಜಯಲಕ್ಷ್ಮಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಜಗದೀಶ್, ಆನಂದ್ ಏಕಲವ್ಯ, ಪೌರಾಯುಕ್ತೆ ಜಿ.ಅಮೃತ ಹಾಜರಿದ್ದರು.








