Home News ಗಡಿ ಭಾಗದಲ್ಲಿ ಕನ್ನಡ ಜಾಗೃತಿಗೆ ಕಸಾಪ ಹೆಜ್ಜೆ: ಹೊಸ ಹೋಬಳಿ ಘಟಕದ ಅಧ್ಯಕ್ಷರಾಗಿ ಎಚ್.ಎನ್. ಶಿವಣ್ಣ...

ಗಡಿ ಭಾಗದಲ್ಲಿ ಕನ್ನಡ ಜಾಗೃತಿಗೆ ಕಸಾಪ ಹೆಜ್ಜೆ: ಹೊಸ ಹೋಬಳಿ ಘಟಕದ ಅಧ್ಯಕ್ಷರಾಗಿ ಎಚ್.ಎನ್. ಶಿವಣ್ಣ ನೇಮಕ

0
Sidlaghatta Kannada Sahitya Parishat Sadali Hobali Unit

Sidlaghatta : ಗಡಿ ಭಾಗದಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಒತ್ತು ನೀಡುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಶಿಡ್ಲಘಟ್ಟ ತಾಲ್ಲೂಕು ಘಟಕವು ಹಮ್ಮಿಕೊಂಡಿರುವ “ಕನ್ನಡ ಸಾಹಿತ್ಯ ಪರಿಷತ್ತಿನ ನಡೆ ಗಡಿ ನಾಡ ಶಾಲೆಗಳ ಕಡೆ” ಅಭಿಯಾನದ ಅಂಗವಾಗಿ ಬುಧವಾರ ಸಾದಲಿ ಗ್ರಾಮದ ಶಾಲವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎನ್. ಶಿವಣ್ಣ ಅವರನ್ನು ಸಾದಲಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ ನೇಮಕಾತಿ ಪತ್ರ ಹಾಗೂ ನಾಡಧ್ವಜವನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಶಿಡ್ಲಘಟ್ಟ ತಾಲ್ಲೂಕಿನ ಗಡಿ ಭಾಗಗಳಲ್ಲಿ ತೆಲುಗು ಭಾಷೆಯ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಭಾಷೆಯ ಸಂರಕ್ಷಣೆ ಮತ್ತು ಪ್ರೋತ್ಸಾಹಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಶಾಲಾ ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಬೆಳೆಸುವುದು ಹಾಗೂ ನಾಡು–ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ಪರಿಷತ್ತಿನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಸಾಪ ಮಾಜಿ ಅಧ್ಯಕ್ಷ ವಿ. ಕೃಷ್ಣಾ ಮಾತನಾಡಿ, ಗಡಿ ಪ್ರದೇಶಗಳಲ್ಲಿ ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸಲು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದು ಹೇಳಿದರು. ಯುವಜನರಲ್ಲಿ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ನೂತನ ಸಾದಲಿ ಹೋಬಳಿ ಘಟಕದ ಕಸಾಪ ಅಧ್ಯಕ್ಷ ಎಚ್.ಎನ್. ಶಿವಣ್ಣ ಮಾತನಾಡಿ, ಗಡಿ ಭಾಗದಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಸಾಹಿತ್ಯ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಡಿ.ಎ. ಸತ್ಯನಾರಾಯಣರಾವ್ ಅವರು ಜಿ.ಪಿ. ರಾಜರತ್ನಂ ಅವರ ಕನ್ನಡ ಗೀತೆಗಳನ್ನು ಹಾಡಿದರು. ಶಾಲೆಯ ಏಳು ವಿದ್ಯಾರ್ಥಿಗಳಿಗೆ ಉತ್ತಮ ಕನ್ನಡ ಲಿಪಿಗಾಗಿ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಕಸಾಪ ಜಂಟಿ ಕಾರ್ಯದರ್ಶಿ ಮುನಿನಾರಾಯಪ್ಪ, ನಿವೃತ್ತ ಶಿಕ್ಷಕ ಎನ್. ಸುಂದರನ್, ಶಾಲೆಯ ಮುಖ್ಯ ಶಿಕ್ಷಕ ಎಚ್.ಎಸ್. ರಾಜೇಶ್, ಎಂ. ಲೀಲಾ, ಆನಂದಮೂರ್ತಿ, ಶ್ರೀನಿವಾಸ್, ಸುಶೀಲಮ್ಮ, ಹರ್ಷಿತ, ಜ್ಯೋತಿ, ಅನುಪಮ, ಕನ್ನಡ ಸಾಹಿತ್ಯ ಪರಿಷತ್ತಿನ ಶಿಡ್ಲಘಟ್ಟ ತಾಲ್ಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಜರಿದ್ದರು.

In English: Kannada Sahitya Parishat’s Sidlaghatta taluk unit appointed H.N. Shivanna as president of its new Sadali hobli unit as part of its border-area school outreach campaign, aimed at strengthening Kannada language and culture in areas seeing increasing Telugu usage. Seven students were felicitated for good Kannada handwriting.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version