Sidlaghatta : ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 4ರಂದು ತಾಲ್ಲೂಕಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ಗೊಲ್ಲ (ಯಾದವ) ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ. ನಗರದ ಟಿ.ಬಿ. ರಸ್ತೆಯ ಶ್ರೀಕೃಷ್ಣ ದೇವಾಲಯದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
40ಕ್ಕೂ ಹೆಚ್ಚು ಪಲ್ಲಕ್ಕಿಗಳ ಮೆರವಣಿಗೆ
ಸಭೆಯಲ್ಲಿ ಮಾತನಾಡಿದ ಸಮುದಾಯದ ಅಧ್ಯಕ್ಷ ಲಕ್ಷ್ಮಣ್, ತಾಲ್ಲೂಕಿನ ವಿವಿಧ ಗ್ರಾಮಗಳಿಂದ 40ಕ್ಕೂ ಹೆಚ್ಚು ಪಲ್ಲಕ್ಕಿಗಳನ್ನು ನಗರಕ್ಕೆ ಕರೆತಂದು ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಆರಂಭವಾಗುವ ಮೆರವಣಿಗೆ ಶ್ರೀಕೃಷ್ಣ ದೇವಾಲಯ, ಕೋಟೆ ವೃತ್ತ, ಮಾರಮ್ಮ ವೃತ್ತದ ಮೂಲಕ ಮಯೂರ ವೃತ್ತ ತಲುಪಲಿದೆ. ವಿವಿಧ ಕಲಾ ತಂಡಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ಅವರು ಹೇಳಿದರು.
ಗೌರವಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಪೂಜಾ, ಸಾಂಸ್ಕೃತಿಕ ಹಾಗೂ ಇತರ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಪ್ರತಿ ಗ್ರಾಮದಿಂದ ಯಾದವ ಸಮುದಾಯದವರು ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಿ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಉಪಾಧ್ಯಕ್ಷ ಕರಿಯಪ್ಪನವರ ಮೂರ್ತಿ, ಖಜಾಂಚಿ ನವೀನ್ ಕುಮಾರ್, ಮಾಜಿ ಅಧ್ಯಕ್ಷ ಅಶ್ವತ್ಥಪ್ಪ, ಯುವ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಾಗಚಂದ್ರ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.
In English: Leaders of the Golla (Yadava) community decided at a preparatory meeting to hold a grand Krishna Janmashtami celebration in Sidlaghatta on September 4, with a procession of 40+ decorated palanquins from villages across the taluk, starting at the KSRTC bus stand and passing through the town’s main circles, along with cultural dance performances.
ಸಮುದಾಯದ ಯಾದವ ಸಂಘದ ನೂತನ ಅಧ್ಯಕ್ಷರ ಆಯ್ಕೆ ಕುರಿತ ವರದಿಯನ್ನೂ ನೋಡಿ.








