Sidlaghatta : ಶಿಡ್ಲಘಟ್ಟ ವಕೀಲರ ಸಂಘ ಹಾಗೂ ಬಾರ್ ಅಸೋಸಿಯೇಷನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ವಿಶೇಷ ಕ್ರಿಕೆಟ್ ಪಂದ್ಯಾವಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಬುಧವಾರ ಚಾಲನೆ ನೀಡಿದರು. ನಾಲ್ಕು ತಂಡಗಳ ನಡುವೆ ನಡೆಯುವ ಪಂದ್ಯಾವಳಿಯ ವಿಜೇತ ತಂಡಕ್ಕೆ ಆಗಸ್ಟ್ 15ರಂದು ಬಹುಮಾನ ವಿತರಿಸಲಾಗುವುದು.
ಜೆಎಂಎಫ್ಸಿ (ನ್ಯಾಯಿಕ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ) ನ್ಯಾಯಾಲಯದ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, “ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ರೀಡಾಕೂಟ ಆಯೋಜಿಸುವ ಮೂಲಕ ವಕೀಲರು, ನ್ಯಾಯಾಧೀಶರು ಹಾಗೂ ಸಿಬ್ಬಂದಿಯ ನಡುವೆ ಸ್ನೇಹ, ಸೌಹಾರ್ದತೆ ಮತ್ತು ತಂಡದ ಮನೋಭಾವ ಬೆಳೆಸುವುದು ಉದ್ದೇಶ” ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಮಾತನಾಡಿ, “ಕ್ರೀಡಾಕೂಟಗಳು ವೃತ್ತಿಜೀವನದ ಒತ್ತಡವನ್ನು ನಿವಾರಿಸುವುದರ ಜತೆಗೆ ಪರಸ್ಪರ ಸ್ನೇಹ ಹಾಗೂ ಸಹಕಾರದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ” ಎಂದು ಹೇಳಿದರು. ಕ್ರಿಕೆಟ್ ಪಂದ್ಯಾವಳಿಯ ಜತೆಗೆ ಮಹಿಳಾ ವಕೀಲರು ಹಾಗೂ ಸಿಬ್ಬಂದಿಗೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷರು ತಿಳಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾವನಾ, ವಕೀಲರ ಸಂಘದ ಕಾರ್ಯದರ್ಶಿ ಭಾಸ್ಕರ್ ಸೇರಿದಂತೆ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.
In English: Sidlaghatta’s Bar Association organized a special cricket tournament at Nehru Stadium to mark the 80th Independence Day, inaugurated by Senior Civil Judge Mohammed Roshan Shah. Four teams of judges, lawyers, and court staff are competing, with prizes to be awarded on August 15; sports activities for women lawyers and staff were also organized alongside the tournament.
ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರ ರೇಷ್ಮೆಗೂಡು ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ಕುರಿತ ವರದಿಯನ್ನೂ ನೋಡಿ.








