
Malamachanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಜಿಲ್ಲೆಯಲ್ಲೇ ಅತಿ ಹೆಚ್ಚಿನ ಹಾಲು ಸರಬರಾಜು ಮಾಡುವ ಡೈರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು , ಉತ್ಪಾದಕರಿಗೆ ಅನುಕೂಲವಾಗಲಿ ಎಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡು ಉತ್ಪಾದಕರ ಆರೋಗ್ಯ ನಿವಾರಣೆಗೆ ಮುಂದಾಗಿದೆ.
ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಆಕಾಶ್ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆ ಹಾಗೂ ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನುರಿತ ವೈದ್ಯರ ತಂಡ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಬಿಪಿ, ಶುಗರ್, ಕಣ್ಣಿನ ಸಮಸ್ಯೆ, ಮೂಳೆ ರೋಗ , ಸ್ತ್ರೀ ರೋಗ ಸೇರಿದಂತೆ ಇನ್ನೂ ಅನೇಕ ಕಾಯಿಲೆಗಳಿಗೆ ಪರೀಕ್ಷೆ ಮಾಡಿ ಔಷಧಿಯನ್ನು ನೀಡಿದರು. ಹೆಚ್ಚಿನ ಚಿಕಿತ್ಸೆ ಅವಶ್ಯವಿರುವವರನ್ನು ಹಾಗು ಶಸ್ತ್ರ ಚಿಕಿತ್ಸೆ ಅವಶ್ಯವಿರುವವರನ್ನು ದೇವನಹಳ್ಳಿ ಬಳಿ ಇರುವ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋದರು.
ಆಕಾಶ್ ಆಸ್ವತ್ರೆಯ ಮಕ್ಸೂದ್ ರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು,ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಲು ನಮ್ಮ ಆಸ್ವತ್ರೆ ಕಡೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನ ಹಮ್ಮಿಕೊಳ್ಳುತಿದ್ದು, ಶಿಬಿರಗಳಲ್ಲಿ ಎಲ್ಲಾ ಸಮಸ್ಯೆಗಳ ವೈದ್ಯರು ಭಾಗವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಎಂ. ಕೆ. ರಾಜಶೇಖರ್ ಮಾತನಾಡಿ, ಗ್ರಾಮೀಣ ಭಾಗದ ಜನತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು, ಈ ಶಿಬಿರದಲ್ಲಿ ಎಲ್ಲಾ ಕಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು ಹೆಚ್ಚಿನ ಚಿಕಿತ್ಸೆ ಇರುವವರಿಗೆ ಆಕಾಶ್ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಈ ಶಿಬಿರದ ಅನುಕೂಲ ಪಡೆದುಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ವಿನಯ್ ಕುಮಾರ್, ಸಂಘದ ಅಧ್ಯಕ್ಷ ದ್ಯಾವಪ್ಪ, ಎಂ. ಜಿ. ನವೀನ್ ಕುಮಾರ್, ಎಂ. ಎನ್. ರಾಮಚಂದ್ರಾಚಾರಿ, ಉಪಾಧ್ಯಕ್ಷೆ ವೆಂಕಟಲಕ್ಷ್ಮಮ್ಮ, ನಿರ್ದೇಶಕರಾದ ಡಿಶ್ ವೆಂಕಟೇಶ್, ಎಂ. ಎನ್. ವೆಂಕಟೇಗೌಡ ,ಎಂ. ಎಸ್. ಕೃಷ್ಣಪ್ಪ , ಅಶೋಕ್, ಕೇಶವ ಮೂರ್ತಿ ಸೇರಿದಂತೆ ಉತ್ಪಾದಕರು ಹಾಗೂ ಮಳಮಾಚನಹಳ್ಳಿ ಗ್ರಾಮಸ್ಥರು ಹಾಜರಿದ್ದರು.