Melur, Sidlaghatta : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಡಿ ನಾವೆಲ್ಲರೂ ಸುರಕ್ಷಿತವಾಗಿ ಬದುಕು ಕಟ್ಟಿಕೊಂಡಿದ್ದೇವೆ. ಡಾ.ಅಂಬೇಡ್ಕರ್ ಅವರನ್ನು ನಾವೆಲ್ಲರೂ ಗೌರವಿಸಬೇಕಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಚೆಂಗಲರಾಯರೆಡ್ಡಿ ವೃತ್ತದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಜಾತಿ ವ್ಯವಸ್ಥೆ ಹೋಗಲಾಡಿಸುವ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿಕೊಟ್ಟವರು. ಮಹಿಳೆಯರಿಗೆ ಸಮಾನತೆ ಕೊಟ್ಟಂತಹ ಮಹಾ ಪುರುಷರಾಗಿದ್ದಾರೆ. ಮಹಿಳೆಯರ ಪರವಾಗಿ ಮಂಡಿಸಿದ್ದ ಬಿಲ್ ಗೆ ಲೋಕಸಭೆಯಲ್ಲಿ ವಿರೋಧ ವ್ಯಕ್ತವಾದಾಗ ಮಹಿಳೆಯರ ಪರವಾಗಿ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೊರಬಂದಿದ್ದರು. ಅವರು ರಚಿಸಿರುವ ಸಂವಿಧಾನದಡಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದರು.
ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ನೊಂದ ಸಮುದಾಯಗಳ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದ ಅಂಬೇಡ್ಕರ್ ತಮ್ಮ ಜ್ಞಾನದ ಮೂಲಕ ಭಾರತದ ಸಂವಿಧಾನ ಶಿಲ್ಪಿಯಾಗಿ ರೂಪುಗೊಂಡರು. ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥವಾಗಿದ್ದು, ಈ ಪವಿತ್ರ ಗ್ರಂಥದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆ ಜಾರಿಗೆ ತರಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಮಾಜಿ ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗ್ರಾ.ಪಂ ಪಿಡಿಓ ಶಾರದಾ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ದಾಸ್, ಶ್ರೀನಿವಾಸ್, ಎಂ.ಕೆ.ರವಿಪ್ರಸಾದ್, ಕುಶಾಲ್, ಧನು, ಗಿರೀಶ್ನಾಯಕ್, ಎಂ.ಜೆ. ಶ್ರೀನಿವಾಸ್, ಮಂಜುನಾಥ್, ದೇವರಾಜ್, ಎಂ.ಆರ್.ಶ್ರೀನಿವಾಸ್, ಗಜೇಂದ್ರಬಾಬು, ಶಿವಾನಂದ, ರವಿಕುಮಾರ್, ಮಹೇಶ್, ಶ್ರೀನಿವಾಸ್ ದಾಸ್, ಬಸ್ ಶ್ರೀನಿವಾಸ್. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್. ಮೇಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ದಲಿತ ಸಂಘರ್ಷ ಸಮಿತಿಯ ಹಲವಾರು ಸದಸ್ಯರು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಪಾಲ್ಗೊಂಡಿದ್ದರು.








